
ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಎಎಂಸಿ ಕಾಲೇಜು ಮುಂಭಾಗ ಪ್ರತಿಭಟನೆ ನಡೆಯಿತು
ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಎಎಂಸಿ ಕಾಲೇಜು ವಿದ್ಯಾರ್ಥಿ ನಿಲಯದ ವಾರ್ಡನ್ ‘ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಬಾರದು’ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕನ್ನಡ ಪರ ಸಂಘಟನೆಗಳ ಮುಖಂಡರು ಬನ್ನೇರುಘಟ್ಟ ಕಾಲೇಜು ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.
ಎಎಂಸಿ ಕಾಲೇಜು ವಿದ್ಯಾರ್ಥಿ ನಿಲಯದ ವಾರ್ಡನ್ ಸುರೇಶ್ ವಿದ್ಯಾರ್ಥಿಗಳಿಗೆ ಕನ್ನಡ ಮಾತನಾಡುವಂತಿಲ್ಲ ಎಂದು ತಾಕೀತು ಮಾಡಿದ್ದ ವಿಡಿಯೊಗಳು ಜಾಲತಾಣದಲ್ಲಿ ಹರಿದಾಡಿದ್ದವು. ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ನೇತೃತ್ವದಲ್ಲಿ ಕಾರ್ಯಕರ್ತರು ಸೋಮವಾರ ಕಾಲೇಜು ಮುತ್ತಿಗೆಗೆ ಯತ್ನಿಸಿದರು.
ಕನ್ನಡ ಮಾತನಾಡಬಾರದು ಎಂದು ಉದ್ಧಟತನದ ಹೇಳಿಕೆ ನೀಡಿದ್ದ ವಾರ್ಡನ್ ಸುರೇಶ್ ವಿರುದ್ಧ ಮಹೇಶ್ ಹತ್ತಿ ಎನ್ನುವವರು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸೋಮವಾರ ಕಾಲೇಜು ಮುಂಭಾಗದಲ್ಲಿ ಡಿವೈಎಸ್ಪಿ ಮೋಹನ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರತಿಭಟನೆಯಲ್ಲಿ ರೂಪೇಶ್ ರಾಜಣ್ಣ ಮಾತನಾಡಿ, ರಾಜ್ಯದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡ ಮಾತನಾಡಬಾರದು ಎಂದು ಹೇಳಲು ಯಾರಿಗೂ ಅಧಿಕಾರವಿಲ್ಲ. ಎಲ್ಲಿಂದಲೋ ಬಂದು ಕನ್ನಡ ಮಾತನಾಡಬಾರದು ಎಂದು ಹೇಳುವುದು ತಪ್ಪು. ಆಗಿರುವ ತಪ್ಪಿಗಾಗಿ ಎಎಂಸಿ ಕಾಲೇಜಿನಲ್ಲಿ ವಾರದೊಳಗೆ ಬೃಹತ್ ಕನ್ನಡ ರಾಜ್ಯೋತ್ಸವ ಸಮಾರಂಭ ಆಯೋಜಿಸಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.