ADVERTISEMENT

ದೊಡ್ಡಬಳ್ಳಾಪುರ: ಅನಂತಕುಮಾರ್ ಹೆಗಡೆ ಪ್ರತಿಕೃತಿ ದಹನ

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 5:15 IST
Last Updated 19 ಜನವರಿ 2024, 5:15 IST
ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ವೃತ್ತದಲ್ಲಿ ಗುರುವಾರ ಸಂಸತ್‌ ಸದಸ್ಯ ಅನಂತ ಕುಮಾರ್ ಹೆಗಡೆ ಪ್ರತಿಕೃತಿ ದಹಿಸಿ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದರು
ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ವೃತ್ತದಲ್ಲಿ ಗುರುವಾರ ಸಂಸತ್‌ ಸದಸ್ಯ ಅನಂತ ಕುಮಾರ್ ಹೆಗಡೆ ಪ್ರತಿಕೃತಿ ದಹಿಸಿ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದರು   

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಂಸದ ಅನಂತಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಏಕವಚನದಲ್ಲಿ ಮಾತನಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ನಗರದಲ್ಲಿ ಅನಂತಕುಮಾರ್ ಹೆಗಡೆ ಅವರ ಪ್ರತಿಕೃತಿ ದಹಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಅನಂತಕುಮಾರ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಮಾತನಾಡುವ ಜತೆಗೆ ಗೊಂದಲಕಾರಿ ಹೇಳಿಕೆ ನೀಡುವ ಮೂಲಕ ಕೋಮು ಗಲಭೆ ಸೃಷ್ಟಿಸಲು ಬೆಂಕಿ ಹಚ್ಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಅವರ ಹೇಳಿಕೆಯನ್ನು ಸಮರ್ಥಿಸುತ್ತಿರುವುದು ಬಿಜೆಪಿ ಸಂಸ್ಕೃತಿಗೆ ಎಂತಹದ್ದು ಎಂಬುದಕ್ಕೆ ಸಾಕ್ಷಿಯಾಗಿದೆ. ನಾಲ್ಕು ವರ್ಷಗಳಿಂದ ಏನೂ ಕೆಲಸ ಮಾಡದೇ ಜನರಿಂದ ದೂರವಾಗಿದ್ದ ಸಂಸದರು ಚುನಾವಣೆ ಸಮೀಪ ಬರುತ್ತಿದ್ದಂತೆ ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ದಿಢೀರ್‌ ಪ್ರಚಾರಕ್ಕೆ ಬರಲು ಪ್ರಯತ್ನಿಸಿದ್ದಾರೆ ಎಂದು ದೂರಿದರು.

ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಇದಕ್ಕೆ ಪ್ರಚೋದನೆ ನೀಡುವಂತಹ ಅನಂತಕುಮಾರ್ ಅವರ ಹೇಳಿಕೆ ಖಂಡನೀಯ. ಜನರಲ್ಲಿ ಅಶಾಂತಿ ಸೃಷ್ಟಿಸುವಂತಹ ಹೇಳಿಕೆ ನೀಡುವ ವ್ಯಕ್ತಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನಾಥ್ ಮಾತನಾಡಿ, ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿರುವ ಸಂಸತ್‌ ಸದಸ್ಯ ಅನಂತಕುಮಾರ್ ಹೆಗಡೆ ಅವರ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಕೂಡಲೇ ಅವರನ್ನು ಸಂಸದರ ಸ್ಥಾನದಿಂದ ಉಚ್ಛಾಟಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿವೆಂಕಟೇಶ್, ನಗರಸಭೆ ಸದಸ್ಯರಾದ ಡಿ.ಎಂ.ಆನಂದ್, ನಾಗರಾಜ್, ನಾಗವೇಣಿ, ಕಾಂಗ್ರೆಸ್ ಎಸ್.ಸಿ.ಘಟಕದ ನಗರ ಅಧ್ಯಕ್ಷ ಮುನಿರಾಜು, ನಗರ ಕಾರ್ಯದರ್ಶಿ ಆಂಜಿನಮೂರ್ತಿ, ಅಲ್ಪಸಂಖ್ಯಾತರ ಘಟಕದ ನಗರ ಘಟಕದ ಅಧ್ಯಕ್ಷ ಬಷೀರ್, ಎಸ್.ಟಿ ನಗರ ಅಧ್ಯಕ್ಷ ಭೀಮಣ್ಣ, ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಕಾಂತರಾಜು, ಮುಖಂಡರಾದ ಕೆ.ಎಂ.ಕೃಷ್ಣಮೂರ್ತಿ, ರಾಜೇಶ್‌ಜವಾಜಿ, ಎಂ.ಜಗದೀಶರೆಡ್ಡಿ, ಎಂ.ಮುನಿರಾಜು, ಮಾರಪ್ಪ,ವಿನೋದ್, ಮಮತ, ಕವಿತ, ಗೋಪಾಲಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.