ADVERTISEMENT

ಶೀಘ್ರವೇ ಹೆಬ್ಬಗೋಡಿಗೆ ಕಾವೇರಿ

10ಲಕ್ಷ ಲೀಟರ್‌ ಕಾವೇರಿ ನೀರು ಸರಬರಾಜು ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 6:15 IST
Last Updated 7 ಮಾರ್ಚ್ 2024, 6:15 IST
ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಕಾವೇರಿ ನೀರು ಸರಬರಾಜು ಮಾಡುವ ಕಾಮಗಾರಿಯನ್ನು ಸಂಸದ ಡಿ.ಕೆ.ಸುರೇಶ್‌ ಮತ್ತು ಶಾಸಕ ಬಿ.ಶಿವಣ್ಣ ಉದ್ಘಾಟಿಸಿದರು
ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಕಾವೇರಿ ನೀರು ಸರಬರಾಜು ಮಾಡುವ ಕಾಮಗಾರಿಯನ್ನು ಸಂಸದ ಡಿ.ಕೆ.ಸುರೇಶ್‌ ಮತ್ತು ಶಾಸಕ ಬಿ.ಶಿವಣ್ಣ ಉದ್ಘಾಟಿಸಿದರು   

ಆನೇಕಲ್: ತಾಲ್ಲೂಕಿನ ಹೆಬ್ಬಗೋಡಿಯಲ್ಲಿ 10 ಲಕ್ಷ ಲೀಟರ್‌ ಕಾವೇರಿ ನೀರು ಸರಬರಾಜು ಕಾಮಗಾರಿಗೆ ಸಂಸದ ಡಿ.ಕೆ.ಸುರೇಶ್‌ ಚಾಲನೆ ನೀಡಿದರು.

ಬಳಿಕ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿ ಮಾತನಾಡಿದ ಅವರು.

ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ಜನಸಂಪರ್ಕ ಸಭೆ ಉತ್ತಮ ವೇದಿಕೆಯಾಗಿದೆ. ಜನಪ್ರತಿನಿಧಿಗಳು ಜನರ ಬಳಿಗೆ ಬಂದು ಕುಂದುಕೊರತೆ ತಿಳಿಯಬೇಕು. ಪರಿಹಾರಕ್ಕೆ ಶ್ರಮಿಸಬೇಕು ಎಂಬುದು ಜನಸಂಪರ್ಕ ಸಭೆಗಳ ಉದ್ದೇಶವಾಗಿದೆ ತಿಳಿಸಿದರು.

ADVERTISEMENT

ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿಗಳಾಗಿದ್ದ ಅತ್ತಿಬೆಲೆ, ಬೊಮ್ಮಸಂದ್ರ, ಹೆಬ್ಬಗೋಡಿ, ಜಿಗಣಿಯನ್ನು ಮೇಲ್ದರ್ಜೇಗೇರಿಸಿ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಆನೇಕಲ್‌ ತಾಲ್ಲೂಕಿನ ವೇಗವನ್ನು ಹೆಚ್ಚಿಸುವ ಸಲುವಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಈ ಹಿಂದಿನ ಸರ್ಕಾರ ಈ ಭಾಗದ ಅಭಿವೃದ್ಧಿಗೆ ಕಡಿಮೆ ಅನುದಾನ ನೀಡಿತ್ತು. ಇದರಿಂದಾಗಿ ಅಭಿವೃದ್ಧಿ ಸಾಧ್ಯವಾಗಲಿಲ್ಲ. ಈ ಅವಧಿಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದ ಸರ್ಕಾರ ಈ ಭಾಗದ ಜನರಿಗೆ ಸೌಲಭ್ಯದ ಮೂಲಕ ಜನರ ಋಣ ತೀರಿಸಲಾಗುವುದು ಎಂದು ತಿಳಿಸಿದರು.

ಮಳೆಯಿಲ್ಲದೇ ಜನ ಪರದಾಡುವಂತಾಗಿದೆ. ಪ್ರತಿ ಗ್ರಾಮಗಳಲ್ಲಿಯೂ ನೀರಿನ ಸಮಸ್ಯೆಗಳೇ ಪ್ರಮುಖವಾಗಿದೆ. ಆನೇಕಲ್‌ ತಾಲ್ಲೂಕಿಗೆ 2 ಎಂಎಲ್‌ಡಿ ನೀರನ್ನು ಸರ್ಕಾರ ಕಲ್ಪಿಸಿದೆ. ಜನರ ಕೆಲಸಗಳನ್ನು ದಿನದ ಕಾಯಕವನ್ನಾಗಿ ಮಾಡಿಕೊಳ್ಳಲಾಗಿದೆ. ಹಾಗಾಗಿ ಜನರ ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುವ ಅವಶ್ಯಕತೆಯಿದೆ. ಆನೇಕಲ್‌ ತಾಲ್ಲೂಕಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುವುದು. ಪೌರಕಾರ್ಮಿಕರಿಗೆ ಭದ್ರತೆ ಕಲ್ಪಿಸಬೇಕು ಎಂಬುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರನ್ನು ಖಾಯಂ ನೇಮಕಾತಿಗೊಳಿಸಲು ಅಗತ್ಯ ಕ್ರಮ ರೂಪಿಸಲಾಗುವುದು ಎಂದರು.

ತಾಲ್ಲೂಕಿನ ಹೆಬ್ಬಗೋಡಿ ನಗರಸಭೆ, ಅತ್ತಿಬೆಲೆ, ಚಂದಾಪುರ ಮತ್ತು ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆಗಳು ನಡೆದವು.

ಬನ್ನೇರುಘಟ್ಟಕ್ಕೂ ಮೆಟ್ರೊ ವಿಸ್ತರಿಸಿ

ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೆಟ್ರೊ ವಿಸ್ತರಣೆಗೆ ಸರ್ಕಾರ ಡಿಪಿಆರ್‌ ಮಾಡಲಾಗಿದೆ. ಚಂದಪುರ ಆನೇಕಲ್‌ ಬನ್ನೇರುಘಟ್ಟಗಳಿಗೆ ಸುಮಾರು 66ಕಿ.ಮೀ. ಮೆಟ್ರೋ ವಿಸ್ತರಣೆ ಮಾಡಬೇಕು ಎಂಬುದು ನಮ್ಮ ಮುಖ್ಯ ಗುರಿಯಾಗಿದೆ. ಆನೇಕಲ್‌ ತಾಲ್ಲೂಕು ಬೆಂಗಳೂರಿನ ಭಾಗ ಈ ಭಾಗದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಡಿ.ಕೆ.ಸುರೇಶ್‌ ತಿಳಿಸಿದರು. ಚಂದಾಪುರದಲ್ಲಿ ಇಂದಿರಾ ಕ್ಯಾಂಟಿನ್‌ ಶಾಸಕ ಬಿ.ಶಿವಣ್ಣ ಮಾತನಾಡಿ ಆನೇಕಲ್‌ ವಿಧಾನಸಭೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳು ಬಡತನ ನಿರ್ಮೂಲನೆ ಉಪಯುಕ್ತವಾಗಿದೆ. ಚಂದಾಪುರದಲ್ಲಿ ಇಂದಿರಾ ಕ್ಯಾಂಟಿನ್‌ಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ವಿವಿಧೆಡೆ ಇಂದಿರಾ ಕ್ಯಾಂಟಿನ್‌ ಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.