ಆನೇಕಲ್: ಆನೇಕಲ್ ತಾಲ್ಲೂಕು ಅನುದಾನ ರಹಿತ ಶಾಲೆಗಳ ಸಂಘದ ವತಿಯಿಂದ ಚಂದಾಪುರದಲ್ಲಿ ಶನಿವಾರ ಪ್ರತಿಭಾ ಪುರಸ್ಕಾರ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
100 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು. ಉತ್ತಮ ಸೇವೆ ಸಲ್ಲಿಸಿದ 45 ಮಂದಿ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ದೊರೆಯುವಂತೆ ಮಾಡುವಲ್ಲಿ ಶಿಕ್ಷಣ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬರ ಜೀವನದಲ್ಲಿ ವಿದ್ಯಾರ್ಥಿ ಹಂತ ಅತ್ಯಂತ ಪ್ರಮುಖ್ಯ ಘಟ್ಟ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಹಂತದಲ್ಲಿ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಶಿಕ್ಷಕರು ಶ್ರಮ ವಹಿಸುತ್ತಾರೆ. ಹಾಗಾಗಿ ಪ್ರತಿಯೊಬ್ಬರು ತಮ್ಮ ಶಿಕ್ಷಕರನ್ನು ಗೌರವಿಸಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ, ಖಾಸಗಿ ಶಾಲಾ ಶಿಕ್ಷಕರಿಗೆ ಸರ್ಕಾರ ಆರೋಗ್ಯ ವಿಮೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸಲಾಗುವುದು. ಖಾಸಗಿ ಶಾಲೆಗಳ ಶಿಕ್ಷಕರು ಒಗ್ಗೂಡಿ ಬ್ಯಾಂಕ್, ಸೊಸೈಟಿ ನಿರ್ಮಿಸಿ ಆರ್ಥಿಕವಾಗಿ ಸಬಲರಾಗಬೇಕು. ಸೊಸೈಟಿಯ ಮೂಲಕ ಸಾಲ ಸೌಲಭ್ಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಖಾಸಗಿ ಶಾಲೆಗಳ ಶಿಕ್ಷಕರು ಪಡೆಯಬೇಕು ಎಂದರು.
ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹೆಚ್ಚು ಮಾಡುತ್ತದೆ. ಸಾಧನೆ ಸಾಧಕನ ಸ್ವತ್ತಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಸಾಧನೆಯತ್ತ ಗಮನ ವಹಿಸಲು ಶ್ರದ್ಧೆ, ನಿರಂತರ ಅಭ್ಯಾಸ ಮತ್ತು ಕಠಿಣ ಅಧ್ಯಯನವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕ್ಯಾಮ್ಸ್ ಸಂಸ್ಥೆಯ ಕಾರ್ಯದರ್ಶಿ ಶಶಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್, ಸಂಘದ ಅಧ್ಯಕ್ಷ ಶೇಖರ್, ಗೌರವ ಅಧ್ಯಕ್ಷ ಡಿ.ಮುನಿರಾಜು, ಕಾರ್ಯದರ್ಶಿ ಥಾಮಸ್, ಉಪಾಧ್ಯಕ್ಷರಾದ ಜ್ಯೋತಿ ಗೌಡ, ಟಿ.ಕೆ.ವಿಧಾತ್, ಕಾರ್ಯಕಾರಿ ಸಮಿತಿಯ ಸುರೇಶ್, ರಾಜೇಂದ್ರ ಪ್ರಸಾದ್, ರಾಜು, ಮುನಿರಾಜು, ಸೃಜನಾ ಸುರೇಶ್, ಆನಂದ್ ಸಿಂಗ್, ರಾಹುಲ್, ಲಕ್ಷ್ಮಣ್, ಗೌರಮ್ಮ, ಸುಮಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್, ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಚಂದ್ರಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.