
ಆನೇಕಲ್: ತಾಲ್ಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯ ನೆರಳೂರು ಗ್ರಾಮದಲ್ಲಿ ಬುಧವಾರ ಹಾಡು ಹಗಲೇ ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಮನೆ ಮಾಲೀಕರ ಕೈ ಕಾಲು ಕಟ್ಟಿಹಾಕಿ ಮನೆಯಲ್ಲಿದ್ದ 200 ಗ್ರಾಂ ಚಿನ್ನಾಭರಣ ದೋಚಿದ್ದಾರೆ.
ತಾಲ್ಲೂಕಿನ ನೆರಳೂರು ಗ್ರಾಮದ ನಿವಾಸಿಗಳಾದ ನಾಗವೇಣಿ ಮತ್ತು ರವಿಕುಮಾರ್ ಅವರ ಮನೆಗೆ ಆಹ್ವಾನ ಪತ್ರಿಕೆ ನೀಡಲು ಬಂದವರಂತೆ ನಟಿಸಿ ದರೋಡೆ ಕಳ್ಳರು ಕೃತ್ಯ ಎಸಗಿದ್ದಾರೆ.
ರವಿಕುಮಾರ್ ಖಾಸಗಿ ಕಂಪನಿಯಲ್ಲಿನ ಉದ್ಯೋಗಿಯಾಗಿದ್ದು, ಮನೆಯಲ್ಲಿ ನಾಗವೇಣಿ ಅವರು ಒಬ್ಬರೇ ಇರುವುದನ್ನು ಗಮನಿಸಿದ ಮೂವರು ದುಷ್ಕರ್ಮಿಗಳು ದರೋಡೆಗೆ ಯೋಜನೆ ರೂಪಿಸಿದ್ದಾರೆ. ಬಂದವರು ಪರಿಚಿತರಿರಬಹುದು ಎಂದು ನಾಗವೇಣಿ ಮನೆ ಬಾಗಿಲು ತೆಗೆದಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಕುಡಿಯಲು ನೀರು ಕೇಳಿದ್ದಾರೆ. ನಾಗವೇಣಿ ಅಡುಗೆ ಮನೆಗೆ ಹೋದಾಗ ಇಬ್ಬರು ಪುರುಷರಲ್ಲಿ ಒಬ್ಬ ಅಡುಗೆ ಮನೆಗೆ ಒಳಗೆ ನುಗ್ಗಿ ನಾಗವೇಣಿ ಅವರ ಕೈಕಾಲು ಕಟ್ಟಿ ಹಾಕಿದ್ದಾರೆ. ಕತ್ತಿಗೆ ಚಾಕು ಇಟ್ಟು ಹೆದರಿಸಿ, ಬೀರುವಿನ ಲಾಕರ್ ಕೀ ಪಡೆದು 200 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾರೆ.
ನಾಗವೇಣಿ ಅವರಿ ಕತ್ತಿಗೆ ಚಾಕು ಇರಿಸಿ ಚಿನ್ನದ ನೆಕ್ಲೆಸ್, ಓಲೆ, ಎರಡು ನೆಕ್ ಚೈನ್, ಉಂಗುರ, ಲಾಂಗ್ ಚೈನ್, 8 ಬೆಳ್ಳಿಯ ಕಾಲ್ಗೆಜ್ಜೆಗಳು, ಕುಂಕುಮ ಬಟ್ಟಲನ್ನು ದುಷ್ಕರ್ಮಿಗಳು ದರೋಡೆ ಮಾಡಿದ್ದಾರೆ. ಅಂದಾಜು ₹15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ಪಿ ಮೋಹನ್ ಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.