ಆನೇಕಲ್: ತಾಲ್ಲೂಕಿನ ವಿವಿಧೆಡೆ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಎಲ್ಲಡೆ ಮಕ್ಕಳು ರಾಧೆ–ಕೃಷ್ಣ ವೇಷಧರಿಸಿ ಸಂಭ್ರಮಪಟ್ಟರು.
ವಿವಿಧ ಶಾಲೆಗಳಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ರೂಪಿಸಿದ್ದರು. ಕೃಷ್ಣನ ನಾಮಸ್ಮರಣೆ ಎಲ್ಲೆಲ್ಲೂ ಕಂಡು ಬಂದಿತು.
ಆನೇಕಲ್ನ ಗುರೂಜಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ರಾಧ ಕೃಷ್ಣ ವೇಷಧಾರಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪುಟಾಣಿ ಮಕ್ಕಳು ಮಡಕೆ ಒಡೆಯುವ ಸ್ಪರ್ಧೆಯಲ್ಲಿ ಪಾಲ್ಗೊಂಡು ಖುಷಿಪಟ್ಟರು. ಕೃಷ್ಣ–ರಾಧೆಯರ ವೇಷಧಾರಿಗಳು ಆಕರ್ಷಕ ನೃತ್ಯ ಪ್ರದರ್ಶಿಸಿದರು.
ತಾಲ್ಲೂಕಿನ ಅತ್ತಿಬೆಲೆ ಪಬ್ಲಿಕ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ರಾಧೆ ಕೃಷ್ಣನ ವೇಷ ಧರಿಸಿ ಸಂಭ್ರಮಿಸಿದರು.
ದೊಮ್ಮಸಂದ್ರ ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕೃಷ್ಣ–ರಾಧೆಯ ಪಾತ್ರಧಾರಿಗಳನ್ನು ಉಯ್ಯಾಲೆಯಾಡುತ್ತಿದ್ದ ದೃಶ್ಯ ಕಣ್ಮನ ಸೆಳೆಯಿತು.
ದೇಗುಲಗಳಲ್ಲಿ ವಿಶೇಷ ಪೂಜೆ:
ಕೃಷ್ಣಾಜನ್ಮಾಷ್ಟಮಿ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ಪೂಜೆ ಕೈಂಕರ್ಯಗಳು ಜರುಗಿದವು. ಪಟ್ಟಣದ ವೇಣುಗೋಪಾಲ ಸ್ವಾಮಿ, ತಿಮ್ಮರಾಯಸ್ವಾಮಿ, ತಾಲ್ಲೂಕಿನ ರಾಮಕೃಷ್ಣಾಪುರ ಪ್ರಸನ್ನ ವೆಂಕಟೇಶ್ವರ ಸ್ವಾಮಿ, ಬನ್ನೇರುಘಟ್ಟ ಚಂಪಕಧಾಮ ಸ್ವಾಮಿ ದೇವಾಲಯಗಳಲ್ಲಿ ಪೂಜೆ ನಡೆಯಿತು. ಭಕ್ತರು ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.