ಆನೇಕಲ್: ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಶಿಕ್ಷಕರು ಹೊಸ ಹೊಸ ವಿಚಾರ ತಿಳಿದು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಮಾಹಿತಿ ತಂತ್ರಜ್ಞಾನವನ್ನು ಶಿಕ್ಷಕರು ಅಳವಡಿಸಿಕೊಂಡು ಜಾಗತಿಕವಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ ಹೇಳಿದರು.
ತಾಲ್ಲೂಕು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಮನ್ವಯ ವೇದಿಕೆಯಿಂದ ತಾಲ್ಲೂಕಿನ ನೆರಳೂರು ಸ್ವಾಮಿ ವಿವೇಕಾನಂದ ವಿದ್ಯಾನಿಕೇತನ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಶಿಕ್ಷಕರು ಪ್ರೋತ್ಸಾಹ ನೀಡಬೇಕು. ಇದರಿಂದಾಗಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳೆವಣಿ ಆಗುತ್ತಾರೆ ಎಂದರು.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ವೃತ್ತಿ. ರಾಧಾಕೃಷ್ಣನ್ ಅವರ ಆದರ್ಶ ತತ್ವಗಳನ್ನು ಶಿಕ್ಷಕರನ್ನು ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರದ್ದು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಬಿತ್ತುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಿಸಬೇಕು. ಶಿಕ್ಷಕರು ಸಮಾಜದ ಆಸ್ತಿಯಾಗಿದ್ದಾರೆ. ಶಿಕ್ಷಕರನ್ನು ಗೌರವಿಸಬೇಕಾದುದ್ದು ಸಮಾಜದ ಕರ್ತವ್ಯ ಎಂದು ಹೇಳಿದರು.
ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಜಿ.ನಾಗರಾಜು, ಪ್ರತಿಯೊಬ್ಬ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕಲೆ, ಸಾಹಿತ್ಯ, ವಿಜ್ಞಾನ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದರು.
ನಿವೃತ್ತ ಶಿಕ್ಷಕರು ಮತ್ತು ಕಳೆದ ಸಾಲಿನಲ್ಲಿ ರಾಜ್ಯ ಪ್ರಶಸ್ತಿ ಪಡೆದ ರಂಗನಾಥ್ ಮತ್ತು ಜಿಲ್ಲಾ ಪ್ರಶಸ್ತಿ ಪಡೆದ ಕೋಮಲಾ, ಯಶೋಧಾ, ಶೋಭಾ ಅವರನ್ನು ಸನ್ಮಾನಿಸಲಾಯಿತು.
ಸ್ವಾಮಿ ವಿವೇಕಾನಂದ ವಿದ್ಯಾನಿಕೇತನ ಸಂಸ್ಥೆಯ ಪ್ರಭು, ಕ್ಷೇತ್ರ ಸಮನ್ವಯಾಧಿಕಾರಿ ಭಾಸ್ಕರ್, ಖಾಸಗಿ ಶಾಲೆಗಳ ಒಕ್ಕೂಟದ ಡಿ.ಮುನಿರಾಜು, ಕಾಳಿನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಪ್ರೇಮಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿ ಎ.ಎನ್.ನರೇಂದ್ರ ಕುಮಾರ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ ರತ್ನಮ್ಮ, ಸಾವಿತ್ರ ಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಸರೋಜಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.