ಆನೇಕಲ್: ಜಲ ಜೀವನ್ ಮಿಷನ್(ಜೆಜೆಎಂ) ಕಾಮಗಾರಿಯಿಂದಾಗಿ ಗ್ರಾಮಗಳ ರಸ್ತೆಗಳು ಅಧ್ವಾನಗೊಂಡಿದೆ. ಅಗೆದ ಗುಂಡಿಗಳನ್ನು ಮುಚ್ಚಿಸಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಬೇಕು ಹಾಗೂ ಕಾಮಗಾರಿಗೆ ವೇಗ ನೀಡಬೇಕೆಂದು ವಿವಿಧ ಗ್ರಾಮಸ್ಥರು ಆಗ್ರಹಿಸಿದರು.
ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಹುಸ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ಅಹವಾಲು ಸಲ್ಲಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಪೈಪ್ ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಆದರೆ ಕಾಮಗಾರಿ ಬಳಿಕ ಮುಚ್ಚಿಲ್ಲ. ಇದರಿಂದ ರಸ್ತೆಯಲ್ಲಿ ಸಂಚರಿಸಲು ಆಗುತ್ತಿಲ್ಲ. ನಿರಂತರ ಮಳೆ ಬರುತ್ತಿರುವುದರಿಂದ ಗುಂಡಿ ತೆಗೆದ ಜಾಗದಲ್ಲಿ ಕೆಸರು ಗದ್ದೆಯಂತೆ ಆಗಿದೆ ಎಂದು ಅವಲತ್ತು ಕೊಂಡರು.
ಚಿಂತಲ ಮಡಿವಾಳ ಗ್ರಾಮದ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮಸಭೆಯಲ್ಲಿ ಸಾರ್ವಜನಿಕರು ಹೇಳಿರುವ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಾಗುವುದು. ಜಲಜೀವನ್ ಮಿಷನ್ ಅಡಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಮತ್ತು ಕಾಮಗಾರಿಗೆ ವೇಗ ನೀಡುವ ಸಲುವಾಗಿ ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರತ್ನಮ್ಮ ರಮೇಶ್ ತಿಳಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಶ್ರೀನಾಥ್, ಯಲ್ಲಪ್ಪ, ಲಕ್ಷ್ಮಿ, ಮಂಜುಳಾ, ರಾಧಾ, ಗೀತಾ, ಭಾಗ್ಯ, ಚಿನ್ನಸ್ವಾಮಿ, ಮುನಿರಾಜು, ಬಾಬುರೆಡ್ಡಿ, ವೀರಭದ್ರಪ್ಪ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅನುಸೂಯ, ಕಾರ್ಯದರ್ಶಿ ಅನಿತಾ ಇದ್ದರು.
ಹುಸ್ಕೂರು ಗ್ರಾಮ ಪಂಚಾಯತಿಯು ಎಲೆಕ್ಟ್ರಾನಿಕ್ ಸಿಟಿ ಸಮೀಪದಲ್ಲಿದೆ. ನಗರ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ನಗರದಲ್ಲಿ ದೊರೆಯುವ ಎಲ್ಲಾ ಸೌಲಭ್ಯ ದೊರೆಯುವಂತೆ ಮಾಡಲು ಆದ್ಯತೆ ನೀಡಲಾಗುತ್ತಿದೆ.ಮುನಿರತ್ನಮ್ಮ ರಮೇಶ ಅಧ್ಯಕ್ಷ ಗ್ರಾಮ ಪಂಚಾಯಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.