ADVERTISEMENT

ಜನವಿರೋಧಿ ನೀತಿಗಳನ್ನು ಧಿಕ್ಕರಿಸಿ

ಡಿ.5ರ ಬಂದ್ ಕರೆಗೆ ವಿವಿಧ ಸಂಘಟನೆಗಳ ಬೆಂಬಲ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 2:53 IST
Last Updated 1 ಡಿಸೆಂಬರ್ 2020, 2:53 IST
ದೊಡ್ಡಬಳ್ಳಾಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು
ದೊಡ್ಡಬಳ್ಳಾಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು   

ದೊಡ್ಡಬಳ್ಳಾಪುರ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5ರಂದು ಕನ್ನಡ ಪರ ಸಂಘಟನೆಗಳ ವತಿಯಿಂದ ಕರೆ ನೀಡಿರುವ ಕರ್ನಾಟಕ ಬಂದ್‌ಗೆ 30ಕ್ಕೂ ಹೆಚ್ಚಿನ ಸಂಘಟನೆಗಳು ಬೆಂಬಲ ಸೂಚಿಸಿವೆ.

ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಡಾ.ರಾಜ್‌ಕುಮಾರ್ ಕಲಾ ಮಂದಿರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘಟನೆಗಳು, ವರ್ತಕರ ಸಂಘ, ಕೃಷ್ಣರಾಜೇಂದ್ರ ಮಾರುಕಟ್ಟೆ ವರ್ತಕರ ಸಂಘ, ಆಟೊ ಚಾಲಕರ ಸಂಘ ಸೇರಿದಂತೆ 30ಕ್ಕೂ ಹೆಚ್ಚು ಸಂಘಟನೆಗಳ ಮುಖಂಡರು ಭಾಗವಹಿಸಿ ತಮ್ಮ ಬೆಂಬಲ ಘೋಷಿಸಿದರು.

ಸಭೆಯಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ರಾಜ್ಯದಿಂದ 25 ಸಂಸದರನ್ನು ಆಯ್ಕೆ ಮಾಡಲಾಗಿದೆ. ಜನಪರವಾಗಿ ಕೆಲಸ ಮಾಡಬೇಕಿದ್ದ ಸರ್ಕಾರ ಕಾರ್ಮಿಕ ಕಾಯ್ದೆಗಳು, ಎಪಿಎಂಸಿ, ಭೂಸುಧಾರಣೆ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮತ್ತು ವಿದ್ಯುತ್ ಖಾಸಗೀಕರಣ ಸೇರಿದಂತೆ ಸುಗ್ರೀವಾಜ್ಞೆಗಳ ಮೂಲಕ ಹಲವು ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಆರೋಪಿಸಿದರು.

ADVERTISEMENT

ಕನ್ನಡಿಗರನ್ನು ಭಾಷೆ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮಾಡಲು ಬಿಡುವುದಿಲ್ಲ ಎಂದ ಮುಖಂಡರು, ಬಂದ್ ಯಾವುದೇ ಭಾಷೆ ಅಥವಾ ಧರ್ಮದವರ ವಿರುದ್ಧವಲ್ಲ. ಬದಲಿಗೆ ಬಿಜೆಪಿ ನೇತೃತ್ವದ ಸರ್ಕಾರ ಕರುನಾಡು ಮತ್ತು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದಾಗಿ ಹೇಳಿದರು.

ಒತ್ತಡವಿಲ್ಲ: ನಾವು ಯಾರನ್ನೂ ಬಲವಂತವಾಗಿ ಬಂದ್ ಮಾಡುವಂತೆ ಒತ್ತಡ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ ಮುಖಂಡರು, ಆರು ತಿಂಗಳ ಕೊರೊನಾ ಸಾಂಕ್ರಾಮಿಕ ಸಂಕಷ್ಟದಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು ಸಂಕಷ್ಟ ಅನುಭವಿಸಿದ್ದೇವೆ. ರಾಜ್ಯದ ಉಳಿವಿಗಾಗಿ ಒಂದು ದಿನದ ಬಂದ್‌ಗೆ ಸಹಕರಿಸುವಂತೆ ವರ್ತಕರು ಮತ್ತು ಜನರಲ್ಲಿ ಮನವಿ ಮಾಡುವುದಾಗಿ ಹೇಳಿದರು.

ಕನ್ನಡಪರ ಸಂಘಟನೆಗಳ ಒಕ್ಕೂಟದ ಸಂಜೀವ್ ನಾಯಕ್, ಜಿ.ಸತ್ಯನಾರಾಯಣ್‌, ತ.ನ.ಪ್ರಭುದೇವ, ಸು.ನರಸಿಂಹಮೂರ್ತಿ,ರಮೇಶ್, ಪ್ರಮಿಳಾ ಮಹದೇವ್,ಆದಿತ್ಯನಾಗೇಶ್, ಆರ್.ಕೆಂಪರಾಜ್, ಶಿವಕುಮಾರ್, ಆರಾಧ್ಯ, ಮುನೇಗೌಡ,ಆಂಜನಮೂರ್ತಿ, ಮುಸ್ತಪಾ, ಜಿ.ಲಕ್ಷ್ಮೀಪತಿ, ಮಲ್ಲೇಶ್, ಪು.ಮಹೇಶ್, ಜಯರಾಮು, ಸತೀಶ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.