ದೇವನಹಳ್ಳಿ:ತಾಲ್ಲೂಕಿನಲ್ಲಿ ಸಾಕಷ್ಟು ಆಸ್ಪತ್ರೆಗಳು ಮೇಲ್ದರ್ಜೆಗೇರಿಲ್ಲ. ಇದರಿಂದ ಸ್ಥಳೀಯ ಜನರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ಅಡಚಣೆಯಾಗಿದ್ದು, ಆಸ್ಪತ್ರೆಗಳ ಉನ್ನತೀಕರಣಗೊಳಿಸಬೇಕು ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು, ಸಚಿವ ಎಂ.ಟಿ.ಬಿ. ನಾಗರಾಜ್ ಅವರ ಮೂಲಕ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ಕ್ಷೇತ್ರದ ಬಹುತೇಕ ಆಸ್ಪತ್ರೆಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ತುರ್ತಾಗಿ ಬೇಕಾಗಿರುವ ಮೂಲಸೌಕರ್ಯದ ಕೊರತೆಯಿದೆ. ತಾಲ್ಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕು. ಇಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.
ದೇವನಹಳ್ಳಿಯಲ್ಲಿ ನಿರ್ಮಾಣಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೋವಿಡ್ 2ನೇ ಅಲೆಯಲ್ಲಿ ಚಿಕಿತ್ಸೆ ನೀಡಲು ಕೋವಿಡ್ ಆಸ್ಪತ್ರೆಯಾಗಿ ಬಳಕೆ ಮಾಡಿಕೊಂಡಿದ್ದೇವೆ. ಇದರಿಂದ ಕ್ಷೇತ್ರದಲ್ಲಿನ ಸೋಂಕಿತರಿಗೆ ಅನುಕೂಲವಾಗಿದೆ. ಈಗ ಇರುವ ಆಸ್ಪತ್ರೆಗೂ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಸಚಿವ ನಾಗರಾಜ್ ಮಾತನಾಡಿ, ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ದೇವನಹಳ್ಳಿ ಆಸ್ಪತ್ರೆಗಳಿಗೆ ಅಗತ್ಯವಾಗಿರುವ ಸೌಕರ್ಯ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.
ಜನರಿಗೆ ಅಗತ್ಯ ಆರೋಗ್ಯ ಸೇವೆ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.