ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ಪ್ರದೇಶ ಆರ್ಯ ಈಡಿಗ ಯುವ ಸಂಘದ ದಶಮಾನೊತ್ಸವ ಸಮಾರಂಭವನ್ನು ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ ಉದ್ಘಾಟಿಸಿದರು
ದೊಡ್ಡಬಳ್ಳಾಪುರ: ಕರ್ನಾಟಕ ಪ್ರದೇಶ ಆರ್ಯ ಈಡಿಗ ಯುವ ಸಂಘದ ದಶಮಾನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಮಾಂಗಲ್ಯ ಕಲ್ಯಾಣ ಮಂದಿರದಲ್ಲಿ ನಡೆಯಿತು.
ಜಾತಿ ರಾಜಕಾರಣ ಎಲ್ಲ ಕಡೆ ನಡೆಯಲ್ಲ. ಸೇವೆ, ಜನಾನುರಾಗಿ ಕಾರ್ಯದಿಂದ ಸಮಾಜ ಗುರುತಿಸುತ್ತದೆ. ಇಂತಹ ಸಾಮರ್ಥ್ಯ ಮತ್ತು ಗುಣಗಳಿಂದಲೇ ಈಡಿಗ ಸಮುದಾಯದ ನಾಯಕರು ಜನಾನುರಾಗಿಗಳಾಗಿ ಉನ್ನತ ಸ್ಥಾನಕ್ಕೆ ಏರಿದ್ದಾರೆ ಎಂದು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಹೇಳಿದರು.
ಈಡಿಗ ಸಮುದಾಯ ಹಿಂದುಳಿದ ಸಮುದಾಯವಾದರೂ ಆರ್.ಎಲ್.ಜಾಲಪ್ಪ, ಬಂಗಾರಪ್ಪ, ಕಾಗೋಡು ತಿಮ್ಮಪ್ಪ,ಕೆ.ಎನ್. ಗುರುಸ್ವಾಮಿ ಸೇರಿದಂತೆ ಹಲವಾರು ಮಹನೀಯರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ ಎಂದರು.
ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಿದರೆ ಸಮಾಜ ಸುಧಾರಿಸುತ್ತದೆ ಎಂದು ಶಾಸಕ ದೀರಜ್ ಮುನಿರಾಜು ಹೇಳಿದರು.
ಈಡಿಗ ಸಮುದಾಯಕ್ಕೆ ಜಮೀನು ಮಂಜೂರು ಮಾಡುವ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ಎಲ್ಲರೂ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.
ಸಮುದಾಯ ಮುಖ್ಯವಾಹಿನಿಗೆ ಬರಲು ಎಲ್ಲಾ ಕ್ಷೇತ್ರಗಳಲ್ಲೂ ಜನಾಂಗವನ್ನು ಮುನ್ನಡೆಸಬೇಕಿದೆ. ಬ್ರಹ್ಮಶ್ರೀ ನಾರಾಯಣ ಗುರು ಆಶಯದಂತೆ ಹಿಂದುಳಿದ ಈಡಿಗ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ ಎಂದು ಸೋಲೂರು ಆರ್ಯ ಈಡಿಗ ಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ ಸಲಹೆ ಮಾಡಿದರು.
ಸಂಘದ ಅಧ್ಯಕ್ಷ ಕೆ.ಜಿ.ಶ್ರೀನಿವಾಸ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಎಸ್ಎಸ್ಎಲ್ಸಿ ಮತ್ತು ಪಿಯು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿದ್ಯಾರ್ಥಿ ವೇತನ ಹಾಗೂ ಶಿಕ್ಷಣ ಪರಿಕರ ವಿತರಿಸಲಾಯಿತು. ಸಂಘದ ಗೌರವ ಅಧ್ಯಕ್ಷ ಎನ್.ಸುನೀಲ್ ಕುಮಾರ್, ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಎಂ.ತಿಮೇಗೌಡ, ಉಪಾಧ್ಯಕ್ಷರಾದ ಜೆ.ರಾಜೇಂದ್ರ, ಟಿ.ಶಿವಕುಮಾರ್, ಜಂಟಿ ಕಾರ್ಯದರ್ಶಿ ಪ್ರಕಾಶ್, ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಜಿ.ಪಂ ಮಾಜಿ ಸದಸ್ಯ ಎನ್.ಅರವಿಂದ್, ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತೆ ಎಸ್.ಸುಮನ, ಸಮುದಾಯದ ಶಾಂತ ರಾಜ್ ಕುಮಾರ್, ಕರ್ನಾಟಕ ಪ್ರದೇಶ ಆರ್ಯ ಈಡಿಗ ಯುವ ಸಂಘದ ಉಪಾಧ್ಯಕ್ಷ ನಾಗರಾಜು, ಪ್ರಧಾನ ಕಾರ್ಯದರ್ಶಿ ಎನ್.ರವಿಕಿರಣ್, ಖಜಾಂಚಿ ಜೆ.ಕುಮಾರ್,ಜಂಟಿ ಕಾರ್ಯದರ್ಶಿ ಡಿ.ರಘು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.