
ದೇವನಹಳ್ಳಿ: ಪಟ್ಟಣದ ಕೊರಚರಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಈಚೆಗೆ ಪ್ರೊರೈಡ್ ಯುಕ್ತ ಕಲುಷಿತ ನೀರು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪುಟ್ಟಸ್ವಾಮಿ, ಇತ್ತೀಚಿನ ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನಸಂಖ್ಯೆ ಹೆಚ್ಚಳ ಹಾಗೂ ಪರಿಸರ ನಾಶದಿಂದ ನೀರಿನ ಕೊರತೆ ತೀವ್ರಗೊಂಡಿದೆ. ಶುದ್ಧ ಕುಡಿಯುವ ನೀರು ಪೂರೈಕೆ ಸವಾಲಾಗಿದೆ ಎಂದರು.
ಶುದ್ಧ ನೀರು ಕುಡಿಯುವುದರಿಂದ ದೇಹದಲ್ಲಿನ ವಿಷಕಾರಿ ಅಂಶಗಳು ಹೊರ ಹೋಗುತ್ತವೆ. ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಮಕ್ಕಳಲ್ಲಿ ಜ್ಞಾಪಕಶಕ್ತಿ ವೃದ್ಧಿಸುತ್ತದೆ. ಹಸಿವು ಆಗುತ್ತದೆ, ಆಯಾಸ ಕಡಿಮೆಯಾಗುತ್ತದೆ. ತಲೆನೋವು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ ಎಂದು ತಿಳಿಸಿದರು.
ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಹಡಪದ್ ಮಾತನಾಡಿ, ಪ್ರೊರೈಡ್ ಯುಕ್ತ ಕಲುಷಿತ ನೀರನ್ನು ನಿರಂತರವಾಗಿ ಸೇವಿಸುವುದರಿಂದ ಅನೇಕ ಕಾಯಿಲೆಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶುದ್ಧ ನೀರನ್ನೇ ಸೇವಿಸಬೇಕು ಎಂದು ತಿಳಿಸಿದರು.
ಶುದ್ಧಗಂಗಾ ಕುಡಿಯುವ ನೀರಿನ ಘಟಕದ ಪೇರಕಿ ಪುಷ್ಪಾವತಮ್ಮ ಮಾತನಾಡಿ, ನೀರಿನಿಂದ ಶೇ 80ರಷ್ಟು ರೋಗಗಳು ಹರಡುತ್ತವೆ. ಕರಳು ಬೇನೆ, ವಾಂತಿ–ಬೇದಿ, ಜ್ವರ ಸೇರಿದಂತೆ ಹಲವು ಕಾಯಿಲೆಗಳಿಗೆ ಕಲುಷಿತ ನೀರು ಕಾರಣವಾಗುತ್ತದೆ. ಪ್ರತಿಯೊಬ್ಬರೂ ಶುದ್ಧ ನೀರಿನ ಮಹತ್ವವನ್ನು ಅರಿತುಕೊಳ್ಳಬೇಕು ಎಂದರು.
ಶುದ್ಧಗಂಗಾ ಮೇಲ್ವಿಚಾರಕರು ಟಿಡಿಎಸ್ ಪರೀಕ್ಷೆ ಹಾಗೂ ಎಲೆಕ್ಟ್ರೋಲೈಸರ್ ಯಂತ್ರದ ಮೂಲಕ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.