ADVERTISEMENT

ಪ್ಯಾಕೇಜ್ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದನೆ: ಮಾಜಿ ಎಂಎಲ್ಸಿ ಅಶ್ವಥ್ ನಾರಾಯಣಗೌಡ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 9:41 IST
Last Updated 10 ಜೂನ್ 2020, 9:41 IST
ಆನೇಕಲ್ ತಾಲ್ಲೂಕಿನ ಮುಗಳೂರು ಗ್ರಾಮದಲ್ಲಿ ಸರ್ಜಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕುಟುಂಬಗಳಿಗೆ ಬಿಜೆಪಿ ವತಿಯಿಂದ ಆಹಾರದ ಕಿಟ್‌ಗಳನ್ನು ಸಂಸದ ಎ.ನಾರಾಯಣಸ್ವಾಮಿ ಮತ್ತು ಮುಖಂಡ ಅಶ್ವಥ್‌ನಾರಾಯಣಗೌಡ ವಿತರಿಸಿದರು
ಆನೇಕಲ್ ತಾಲ್ಲೂಕಿನ ಮುಗಳೂರು ಗ್ರಾಮದಲ್ಲಿ ಸರ್ಜಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕುಟುಂಬಗಳಿಗೆ ಬಿಜೆಪಿ ವತಿಯಿಂದ ಆಹಾರದ ಕಿಟ್‌ಗಳನ್ನು ಸಂಸದ ಎ.ನಾರಾಯಣಸ್ವಾಮಿ ಮತ್ತು ಮುಖಂಡ ಅಶ್ವಥ್‌ನಾರಾಯಣಗೌಡ ವಿತರಿಸಿದರು   

ಆನೇಕಲ್: ಕೊರೊನಾ ಸಂಕಷ್ಟದ ಸಮಯದಲ್ಲಿ ಯಾವುದೇ ಸಮುದಾಯವು ತೊಂದರೆಗೆ ಸಿಲುಕದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ₹ 20 ಲಕ್ಷ ಕೋಟಿ ಪ್ಯಾಕೇಜ್‌ ಪ್ರಕಟಿಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವಥ್‌ನಾರಾಯಣಗೌಡ ತಿಳಿಸಿದರು.

ಅವರು ತಾಲ್ಲೂಕಿನ ಮುಗಳೂರು ಗ್ರಾಮದಲ್ಲಿ ಸರ್ಜಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕುಟುಂಬಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಆಹಾರದ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.

‘ಕೊರೊನಾ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ತೀರ್ಮಾನಗಳನ್ನು ವಿಶ್ವವೇ ಮೆಚ್ಚಿಕೊಂಡಿದೆ. ರೈತರ ಖಾತೆ ಗಳಿಗೆ ಹಣ ಜಮಾವಣೆ, ಜನಧನ್‌ ಯೋಜನೆ ಯಡಿ ಹಣ ಜಮೆ, ಮೂರು ತಿಂಗಳು ಮುಂಗಡವಾಗಿ ಕುಟುಂಬಗಳಿಗೆ ಪಡಿತರ ವಿತರಣೆ ಸೇರಿದಂತೆ ಸಂಕಷ್ಟದ ಸಮಯದಲ್ಲಿ ಯಾವುದೇ ಕುಟುಂಬವು ಹಸಿವಿನಿಂದ ಬಳಲಬಾರದು ಎಂದು ಸಮರೋಪಾದಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೀರ್ಮಾನ ಕೈಗೊಂಡು ಕೆಲಸ ಮಾಡಿದೆ’ ಎಂದರು.

ADVERTISEMENT

‘ಪ್ರಧಾನಮಂತ್ರಿ ರೈತ ಸಮ್ಮಾನ್‌ ಯೋಜನೆಯಡಿ ರೈತರ ಖಾತೆಗಳಿಗೆ ಆರು ಸಾವಿರ ರೂಪಾಯಿ ಜಮೆ ಮಾಡುವ ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲೆ ₹ 87 ಕೋಟಿ ಹಣ ಜಮೆಯಾಗಿದೆ. ರಾಜ್ಯ ಸರ್ಕಾರದಿಂದ 20 ಕೋಟಿ ಹಣ ಜಮೆಯಾಗಿದೆ. ಆನೇಕಲ್‌ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕುಗಳಿಗೆ ₹ 13 ಕೋಟಿ ಹಣ ರೈತರ ಖಾತೆಗಳಿಗೆ ನೇರವಾಗಿ ಜಮೆಯಾಗಿದೆ. ಕೇಂದ್ರ ಸರ್ಕಾರದಿಂದ ನೇರವಾಗಿ ಅನುದಾನ ಬಿಡುಗಡೆ ಮಾಡುವ ಮೂಲಕ ಪಾರದರ್ಶಕ ಆಡಳಿತ ನೀಡಲಾಗಿದೆ’ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುವ ಮೂಲಕ ಮಧ್ಯವರ್ತಿಗಳ ಹಾವಳಿಯಿಲ್ಲದೇ ಹಣ ಪೋಲಾಗದೇ ನೇರವಾಗಿ ಅರ್ಹರಿಗೆ ತಲುಪಿತ್ತಿರುವುದು ಬಿಜೆಪಿ ಸರ್ಕಾರದ ಹೆಗ್ಗಳಿಕೆಯಾಗಿದೆ ಎಂದರು.

ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಮಾತನಾಡಿ, ‘ಸಾಮಾನ್ಯ ಕಾರ್ಯಕರ್ತರು ಉನ್ನತ ಹುದ್ದೆಗಳನ್ನು ಏರಲು ಅವಕಾಶವಿರುವ ಏಕೈಕ ಪಕ್ಷ ಬಿಜೆಪಿ. ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೇ ಗೊತ್ತಿಲ್ಲದಂತೆ ಆಯ್ಕೆ ಮಾಡಿರುವುದು ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರ ಮೇಲಿರುವ ವಿಶ್ವಾಸಕ್ಕೆ ಕಾರಣವಾಗಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ವಿ.ಶಿವಪ್ಪ, ಆನೇಕಲ್‌ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಜಯಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಹುಲ್ಲಹಳ್ಳಿ ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಸಂಪತ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.