ಬೆಂಗಳೂರು: ‘ಮಕ್ಕಳು ಕಳ್ಳರು ಬಂದಿದ್ದಾರೆ’ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಡಲಾಗುತ್ತಿದ್ದು, ಇದನ್ನು ನಂಬಿ ಯಾರಾದರೂ ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡಿದರೆ ಅಥವಾ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ‘ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಅಪರಿಚಿತರು ಕಂಡುಬಂದರೆ ಪೊಲೀಸ್ ನಿಯಂತ್ರಣ ಕೊಠಡಿ 112ಕ್ಕೆ ಕರೆ ಮಾಡಿ ವಿಷಯ ತಿಳಿಸಬೇಕು. ಸಂಬಂಧಪಟ್ಟ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸುತ್ತಾರೆ’ ಎಂದಿದ್ದಾರೆ. ‘ಸುಳ್ಳು ಮಾಹಿತಿಯಿಂದಾಗಿ ಜನರು ಆತಂಕಗೊಂಡಿದ್ದಾರೆ. ಅಪರಿಚಿತ, ಅಮಾಯಕ ಜನರನ್ನು ಅಡ್ಡಗಟ್ಟಿ ಥಳಿಸುತ್ತಿದ್ದಾರೆ.
ಇಂಥ ಘಟನೆಗಳಿಗೆ ಜಿಲ್ಲೆಯಲ್ಲಿ ಅವಕಾಶವಿಲ್ಲ. ಅಮಾಯಕ ವ್ಯಕ್ತಿಗಳನ್ನು ಸುಖಾಸುಮ್ಮನೇ ಅಡ್ಡಗಟ್ಟಿ, ಹಲ್ಲೆ ಮಾಡುವುದು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸುಳ್ಳು ಮಾಹಿತಿ ಹರಡಿಸುವವರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.