ADVERTISEMENT

ಅಂಬೇಡ್ಕರ್‌ ಸಿದ್ಧಾಂತಕ್ಕೆ ಬಿಜೆಪಿ‌ ಬದ್ಧ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2024, 5:16 IST
Last Updated 14 ಏಪ್ರಿಲ್ 2024, 5:16 IST
ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿದರು
ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿದರು   

ಆನೇಕಲ್ : ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಪಕ್ಷ ಜನರ ದಿಕ್ಕು ತಪ್ಪಿಸುತ್ತಿದೆ. ಸಂವಿಧಾನ ಬದಲಾವಣೆಯ ಹೆಸರಿನಲ್ಲಿ ಬಿಜೆಪಿಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ. ಬಿಜೆಪಿ ಪಕ್ಷವು ಭಾರತದ ಏಕತೆ ಮತ್ತು ಸಮಗ್ರತೆಯ ಸಿದ್ಧಾಂತವನ್ನು ಅಳವಡಿಸಿಕೊಂಡಿರುವ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಅವಮಾನ ಮಾಡಿದೆ. ಅಂಬೇಡ್ಕರ್‌ ಅವರು ಚುನಾವಣೆ ನಿಂತ ಸಮಯದಲ್ಲಿ ಅವರನ್ನು ಕಾಂಗ್ರೆಸ್‌ ಪಕ್ಷ ಸೋಲಿಸಿತ್ತು. ಆದರೆ ಬಿಜೆಪಿ ಅಂಬೇಡ್ಕರ್‌ ಅವರ ಸಿದ್ಧಾಂತ ನಂಬಿರುವ ಪಕ್ಷವಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರಗಳಿಂದಾಗಿ ಭಾರತ ವಿಶ್ವಗುರುವಾಗುವತ್ತ ಮುನ್ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಬಲಿಷ್ಠ ಭಾರತದ ಕನಸನ್ನು ನನಸುಗೊಳಿಸಲು ಮತದಾರರು ಬಿಜೆಪಿಗೆ ಮತ ನೀಡಬೇಕು. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಭಾರತಾದ್ಯಂತ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯುವುದು ನಿಶ್ಚಿತ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ರಾಜ್ಯದ ಕಾಂಗ್ರೆಸ್‌ ಸರ್ಕಾರ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದು ₹14ಸಾವಿರ ಕೋಟಿ ಹಣವನ್ನು ಗ್ಯಾರಂಟಿಗೆ ನೀಡುವ ಮೂಲಕ ದುರುಪಯೋಗ ಮಾಡಿಕೊಂಡಿದೆ. ನಿಗಮ ಮತ್ತು ಮಂಡಳಿಗಳಿಗೆ ಯಾವುದೇ ಅನುದಾ ನೀಡುತ್ತಿಲ್ಲ. ಸ್ವಾಭಿಮಾನಿ ಬದುಕನ್ನು ಕಟ್ಟಿಕೊಳ್ಳಬೇಕಾದ ಯುವಕರಿಗೆ ಕಾಂಗ್ರೆಸ್‌ ಸರ್ಕಾರ ದ್ರೋಹ ಬಗೆದಿದೆ. ಕೇಂದ್ರದ ಬಿಜೆಪಿ ಸರ್ಕಾರದ ಮುದ್ರಾ, ಸ್ವನಿಧಿ, ಉಜ್ವಲ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಆರ್ಥಿಕವಾಗಿ ಹಿಂದುಳಿದವರಿಗೆ ಬಲ ನೀಡಿದೆ. ಹಾಗಾಗಿ ಜನತೆ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು ಎಂದರು.

ಬಿಜೆಪಿ ಅಭ್ಯರ್ಥಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಮಾತನಾಡಿ, ಕ್ಷೇತ್ರದ ಕೆಲಸ ಮೊದಲ ಆದ್ಯತೆಯಾಗಿದೆ. ಉತ್ತಮ ಆರೋಗ್ಯ ಸೇವೆ, ಶಿಕ್ಷಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂಬುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರುಯ.

ವಿಧಾನ ಪರಿಷತ್‌ ಸದಸ್ಯ ಗೋಪಿನಾಥರೆಡ್ಡಿ, ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್‌, ಮುಖಂಡರಾದ ಅಶೋಕ್‌ ಗೌಡ, ಕೆ.ವಿ.ಶಿವಪ್ಪ, ಹುಲ್ಲಹಳ್ಳಿ ಶ್ರೀನಿವಾಸ್‌, ರಾಜಶೇಖರರೆಡ್ಡಿ, ಮುನಿರಾಜುಗೌಡ, ಎಸ್‌.ಆರ್‌.ಟಿ.ಅಶೋಕ್‌, ಪಂಡಿತನ ಅಗ್ರಹಾರ ವಿ.ಆಂಜಿನಪ್ಪ, ಚಿನ್ನಸ್ವಾಮಿ, ಶಂಕರ್‌, ಶುಭಾನಂದ್‌, ರಾಧಾಕೃಷ್ಣ, ಸೋಮಶೇಖರರೆಡ್ಡಿ, ಲಕ್ಷ್ಮೀಕಾಂತ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.