ADVERTISEMENT

ಕೋವಿಡ್‌ ನಿರ್ವಹಣೆ: ಸರ್ಕಾರದ ಕಾರ್ಯಕ್ಕೆ ಅರುಣ್ ಸಿಂಗ್ ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 12:52 IST
Last Updated 16 ಜೂನ್ 2021, 12:52 IST
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಬರಮಾಡಿಕೊಂಡ ಬಿಜೆಪಿ ಮುಖಂಡರು
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಬರಮಾಡಿಕೊಂಡ ಬಿಜೆಪಿ ಮುಖಂಡರು   

ದೇವನಹಳ್ಳಿ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೋವಿಡ್ ಸಂದರ್ಭದಲ್ಲೂ ಉತ್ತಮವಾಗಿ ನಿರ್ವಹಣೆ ಮಾಡಿದ್ದು, ಸೋಂಕು ನಿಯಂತ್ರಣಕ್ಕೆ ತರುವಲ್ಲಿ ಸಚಿವರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದರು.

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉತ್ತಮವಾಗಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ವಿನಾಕಾರಣ ಆರೋಪ ಮಾಡುವಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ನಿರತರಾಗಿದ್ದಾರೆ. ಅವರ ಅವಧಿಯಲ್ಲಿ ಏನೂ ಮಾಡಲಿಲ್ಲ. ಈಗ ಅಭಿವೃದ್ಧಿಯತ್ತ ಸಾಗುತ್ತಿರುವ ಬಿಜೆಪಿಯ ಬೆಳವಣಿಗೆ ಸಹಿಸಲಿಕ್ಕೆ ಅವರಿಂದ ಸಾಧ್ಯವಾಗುತ್ತಿಲ್ಲ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಲಿಲ್ಲ. ‘ಅಲ್ಲಿಗೆ ಹೋಗಿ ಮಾತನಾಡುತ್ತೇನೆ’ ಎಂದು ಹೇಳಿದ ಅವರು, ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ನಡೆಸಲಿದ್ದೇನೆ. ಪ್ರತ್ಯೇಕವಾಗಿ ಸಚಿವರೊಂದಿಗೆ ಸಮಾಲೋಚನೆ ನಡೆಸಲಿದ್ದು, ಪ್ರತಿಯೊಂದು ಇಲಾಖೆಯಲ್ಲಿ ಆಗಿರುವ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದೇನೆ. ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕುರಿತು ಚರ್ಚೆ ಮಾಡಲಿಕ್ಕೆ ಸಮಯ ನಿಗದಿಪಡಿಸಿದ್ದೇವೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.