ಆನೇಕಲ್: ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಆಡಳಿತದಲ್ಲಿದೆ. ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆ ನಂತರ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಗಾಬರಿಯಾಗುತ್ತಿದೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ತಾಲ್ಲೂಕಿನ ಬಿದರಗುಪ್ಪೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನಲ್ಲಿಯೂ ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲದಂತಾಗಿರುವುದು ದುರಂತ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದರು.
ಕಾಂಗ್ರೆಸ್ ಸರ್ಕಾರ ಪ್ರೇಮಿಗಳ ಕಲಹ ಎಂಬ ಉಡಾಫೆ ಉತ್ತರ ನೀಡುತ್ತಿದೆ. ಈ ಪ್ರಕರಣದಿಂದಾಗಿ ಕರ್ನಾಟಕದ ಜನತೆ ತಲೆ ತಗ್ಗಿಸುವಂತಾಗಿದೆ. ಗೃಹ ಸಚಿವ ಪರಮೇಶ್ವರ ಈ ಬಗ್ಗೆ ದಾಖಲೆ ಬಿಡುಗಡೆ ಮಾಡಿ ನಂತರ ಕ್ಷಮಾಪಣೆ ಕೇಳುತ್ತಾರೆ. ಸರ್ಕಾರ ಹೆಣ್ಣು ಮಗುವಿನ ವಿಚಾರದಲ್ಲಿ ಚೆಲ್ಲಾಟ ಆಡುವುದು ಬೇಡ ಎಂದು ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ ಕಾರ್ಯಕರ್ತರಾಗಿರುವ ನೇಹಾ ತಂದೆ ನಿರಂಜನಯ್ಯ ಹಿರೇಮಠ ಅವರೇ ಕಾಂಗ್ರೆಸ್ ಆಡಳಿತದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇದು ಲವ್ ಜಿಹಾದ್ ಎಂಬ ಬಗ್ಗೆ ಅನುಮಾನ ವ್ಯಕ್ತ ಪಡಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಮಕ್ಕಳಿಗೂ ಸಹ ರಕ್ಷಣೆ ದೊರೆಯುತ್ತಿಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.