ADVERTISEMENT

ಲೋಕಸಭಾ ಚುನಾವಣೆ | ಶಿಡ್ಲಘಟ್ಟದಲ್ಲಿ ಬಿಜೆಪಿಯ ಪ್ರಮುಖರ ಸಭೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2024, 14:19 IST
Last Updated 15 ಫೆಬ್ರುವರಿ 2024, 14:19 IST
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರ ಸಭೆಯಲ್ಲಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿದರು
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರ ಸಭೆಯಲ್ಲಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿದರು   

ಶಿಡ್ಲಘಟ್ಟ: ಮುಂಬರುವ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರನ್ನು ಗೆಲ್ಲಿಸುವ ಮೂಲಕ ಮತ್ತೆ ನರೇಂದ್ರ ಮೋದಿ ಅವರನ್ನೆ ದೇಶದ ಪ್ರಧಾನಿಯನ್ನಾಗಿ ಮಾಡಬೇಕಿದೆ. ಅದಕ್ಕೆ ನಾವೆಲ್ಲರೂ ಈಗಿನಿಂದಲೆ ಶ್ರಮಿಸಬೇಕಿದೆ ಎಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ಸೀಕಲ್‌ನ ತಮ್ಮ ನಿವಾಸದಲ್ಲಿ ನಡೆದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಹಾಗೂ ನಗರದ ವಾರ್ಡ್‌ವಾರು ಪ್ರಮುಖರ ಸಭೆಯಲ್ಲಿ ಮಾತನಾಡಿದರು.

ಮೋದಿ ಅವರು ತಮ್ಮ ಜನಪರ ಕಾರ್ಯಕ್ರಮಗಳಿಂದ, ಗಟ್ಟಿಯಾದ ಹಾಗೂ ಬಿಗಿಯಾದ ಆಡಳಿತ, ನಾಯಕತ್ವದಿಂದಾಗಿ ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಅವರ ವರ್ಚಸ್ಸು ದಿನ ದಿನಕ್ಕೂ ಹೆಚ್ಚುತ್ತಿದ್ದು ಭಾರತ ಅವರ ನಾಯಕತ್ವದಲ್ಲಿ ವೇಗವಾಗಿ ಅಭಿವೃದ್ದಿ ಹೊಂದಿ ವಿಶ್ವದ ಮುಂಚೂಣಿ ಸ್ಥಾನಕ್ಕೆ ಲಗ್ಗೆಯಿಡುತ್ತಿದೆ ಎಂದರು.

ADVERTISEMENT

ಮೋದಿ ಅವರ ವರ್ಚಸ್ಸನ್ನು ಸದುಪಯೋಗಪಡಿಸಿಕೊಂಡು ಸಂಸತ್ ಚುನಾವಣೆಯನ್ನು ಎದುರಿಸಬೇಕಿದೆ. ಮತ್ತೊಮ್ಮೆ ಮೋದಿ ಎಂಬ ಘೋಷಣೆಯೊಂದಿಗೆ ಪ್ರತಿ ಮತದಾರನ ಮನ ಗೆಲ್ಲಬೇಕಿದೆ ಎಂದು ಹೇಳಿದರು.

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಹಾಗೂ ಪಕ್ಷದ ಮುಖಂಡರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಕ್ಷ ಸಂಘಟನೆ, ಅಧಿಕಾರ ಹಿಡಿಯುವ ಬಗ್ಗೆ ಕಾಲ ಕಾಲಕ್ಕೆ ಹಿರಿಯ ನಾಯಕರಿಂದ ಬರುವ ಸಲಹೆ ಸೂಚನೆಗಳನ್ನು ಪಾಲಿಸಬೇಕಿದೆ, ಆ ಮೂಲಕ ಮೈತ್ರಿಯನ್ನು ಕಾಪಾಡಿಕೊಂಡು ಹೋಗುವ ಅನಿವಾರ್ಯವೂ ನಮ್ಮ ಮೇಲಿದೆ ಎಂದು ತಿಳಿಸಿದರು.

ಚುನಾವಣೆಯನ್ನು ಎದುರಿಸುವುದು ಹೇಗೆ, ಮೈತ್ರಿಯ ಹೊಂದಾಣಿಕೆಯಲ್ಲಿ ನಮ್ಮೆಲ್ಲರ ಪಾತ್ರ ಏನು, ಮೋದಿಯವರಿಗೆ ಇರುವ ವರ್ಚಸ್ಸನ್ನು ಬಳಸಿಕೊಳ್ಳುವುದು ಹೇಗೆಂಬ ಬಗ್ಗೆ ಸಭೆಯಲ್ಲಿ ಆಂತರಿಕವಾಗಿ ಚರ್ಚಿಸಲಾಯಿತು.

ಮಾಜಿ ಶಾಸಕ ಎಂ.ರಾಜಣ್ಣ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಕಾಂತರಾಜು, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸೀಕಲ್ ಆನಂದಗೌಡ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.