ಬೆಂಗಳೂರು: ರಾಜ್ಯದಲ್ಲಿ ರಕ್ತದ ಕೊರತೆ ನೀಗಿಸಲು ಆರೋಗ್ಯ ಇಲಾಖೆ ಕ್ರಿಯಾ ಯೋಜನೆ ರೂಪಿಸಿದ್ದು, ಸ್ವಯಂಪ್ರೇರಿತ ರಕ್ತದಾನಿಗಳಿಗೆ ವಾಹನ ವ್ಯವಸ್ಥೆ ಮಾಡಲು ಇಲಾಖೆ ನಿರ್ಧರಿಸಿದೆ.
ಕೊರೊನಾ ಸೋಂಕು ಭೀತಿ ಹಾಗೂ ಲಾಕ್ ಡೌನ್ನಿಂದಾಗಿ ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಗರ್ಭಿಣಿಯರು, ಬಾಣಂತಿಯರು, ಅಪಘಾತಕ್ಕೊಳಗಾದವರು, ರಕ್ತ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಮರ್ಪಕವಾಗಿ ರಕ್ತವನ್ನು ಒದಗಿಸಲು ಸಾಧ್ಯವಾಗದಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಅಧಿಕಾರಿಗಳು ಜಿಲ್ಲೆಗಳಲ್ಲಿ ಸ್ವಯಂಪ್ರೇರಿತ ರಕ್ತ ದಾನಿಗಳ ಪಟ್ಟಿಯನ್ನು ಕೂಡಲೇ ಸಿದ್ಧಪಡಿಸಬೇಕು. ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ವಿಶ್ವವಿದ್ಯಾಲಯಗಳ ಮುಖ್ಯಸ್ಥರು ರಕ್ತನಿಧಿ ಕೇಂದ್ರಗಳಿಗೆ ಬರುವ ದಾನಿಗಳಿಗೆವಾಹನ ವ್ಯವಸ್ಥೆ ಮಾಡಬೇಕು ಎಂದು ಇಲಾಖೆ ಆಯುಕ್ತರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ರಕ್ತದಾನಿಗಳಿಗಾಗಿಯೇ ಕಾಲ್ ಸೆಂಟರ್ ಪ್ರಾರಂಭಿಸಲಾಗಿದ್ದು, ಬೆಳಿಗ್ಗೆ 8ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ರಕ್ತದಾನ ಮಾಡುವವರು ಮೊ. 9154153920ಕ್ಕೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.