ADVERTISEMENT

ಅದ್ದೂರಿ ಚನ್ನಕೇಶವಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2020, 13:32 IST
Last Updated 10 ಮಾರ್ಚ್ 2020, 13:32 IST
ವಿಜಯಪುರದ ಗಾಂಧಿಚೌಕದಲ್ಲಿ ಪುರಾಣ ಪ್ರಸಿದ್ಧ ಚನ್ನಕೇಶವಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನಡೆಯಿತು
ವಿಜಯಪುರದ ಗಾಂಧಿಚೌಕದಲ್ಲಿ ಪುರಾಣ ಪ್ರಸಿದ್ಧ ಚನ್ನಕೇಶವಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನಡೆಯಿತು   

ವಿಜಯಪುರ: ಪುರಾಣ ಪ್ರಸಿದ್ಧ ಚನ್ನಕೇಶವಸ್ವಾಮಿ ದೇಗುಲದಲ್ಲಿ ಹೋಳಿ ಹುಣ್ಣಿಮೆ ಅಂಗವಾಗಿ ಸೋಮವಾರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಇಲ್ಲಿನ ಕೋಟೆ ಬೀದಿಯಲ್ಲಿರುವ ದೇವಾಲಯದಲ್ಲಿ ದೇವರಿಗೆ ಧಾರ್ಮಿಕ ವಿಧಿ ವಿಧಾನಗಳಂತೆ ವಿಶೇಷ ಪೂಜೆ ನೆರವೇರಿಸಲಾಯಿತು.

ಗಾಂಧಿಚೌಕದಲ್ಲಿ ಬಣ್ಣ ಬಣ್ಣದ ಕಾಗದ ಹಾಗೂ ಹೂಗಳಿಂದ ಸಿಂಗರಿಸಿದ್ದ ರಥದಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ತಂದು ದೇವಾಲಯವನ್ನು ಮೂರು ಬಾರಿ ಪ್ರದಕ್ಷಿಣೆ ಮಾಡಿ ಪೂಜೆ ಸಲ್ಲಿಸಿದ ನಂತರ ಚಾಲನೆ ನೀಡಲಾಯಿತು.

ADVERTISEMENT

ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ, ಮಹಾ ಮಂಗಳಾರತಿ, ಶ್ರೀಮತ್ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಭಾಗವತ ಸೇವೆ, ಮಂಟಪ ಪಡಿ ಸೇವೆ, ಯಾತ್ರಾದಾನೋತ್ಸವ, ಬ್ರಾಹ್ಮಣ ಸಂತರ್ಪಣೆ, ಪಾನಕಪೂಜೆ, ಕಲ್ಯಾಣ ಮಂಟಪಕ್ಕೆ ಹೂವಿನ ಅಲಂಕಾರ ಧೂಳೋತ್ಸವ ಮುಂತಾದ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿಸಲಾಯಿತು.

ಹುಣ್ಣಿಮೆ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳನ್ನು ಏರ್ಪಡಿಸಲಾಗಿತ್ತು. ಸುತ್ತಲಿನ ಹಳ್ಳಿಗಳಿಂದ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಂಡು ದೇವರ ದರ್ಶನ ಪಡೆದರು. ಪಟ್ಟಣದಲ್ಲಿ ಜಾತ್ರೆಯ ವಾತಾವರಣ ನಿರ್ಮಾಣವಾಗಿತ್ತು. ಅಂಗಡಿ ಮುಂಗಟ್ಟುಗಳಲ್ಲಿ ಜನರು ತಿಂಡಿ– ತಿನಿಸು ಖರೀದಿ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂದಿತು.

ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾದಿಗಳು ರಥಕ್ಕೆ ಬಾಳೆ ಹಣ್ಣು, ದವನ ಎಸೆದು ಭಕ್ತ ಭಾವದಿಂದ ಹರಿಕೆ ತೀರಿಸಿದರು. ರಥೋತ್ಸವದ ಅಂಗವಾಗಿ ದೇವಾಲಯದ ಅನ್ನದಾನ ಸಮಿತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಯುವಕರು ಕೈಗಳ ಮೇಲೆ ಹಚ್ಚೆ ಹಾಕಿಸಿಕೊಳ್ಳಲು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿ ಕಂಡು ಬಂದಿತು. ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.