ದೇವನಹಳ್ಳಿ: ಹೊಸಕೋಟೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿ ಫೆ. 7ರಂದು ಬೆಳಿಗ್ಗೆ 7 ಗಂಟೆ ನಂತರ ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪರವಾಗಿ ಇತರರು ಯಾವುದೇ ವಿಧದಲ್ಲಿ ಬಹಿರಂಗ ಚುನಾವಣಾ ಪ್ರಚಾರವನ್ನು ನಡೆಸುವುದು ನಿಷೇಧವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
‘ಮತದಾನ ಪ್ರಾರಂಭವಾಗುವ 48 ಗಂಟೆಗಳ ಮುಂಚೆ ಪ್ರಚಾರ ನಿಷೇಧಿಸಿದೆ ಎಂದಿದ್ದಾರೆ. ಗ್ರಾಮಾಂತರ ಜಿಲ್ಲೆಯ 31 ವಾರ್ಡ್ಗಳ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರವು ಫೆ.7ರ ಬೆಳಿಗ್ಗೆ 7 ಗಂಟೆಯ ನಂತರ ಮತದಾರರಲ್ಲದ ಬೆಂಬಲಿಗರು, ರಾಜಕೀಯ ಪಕ್ಷದ ಪದಾಧಿಕಾರಿಗಳು, ಮುಖಂಡರು, ಪಕ್ಷದ ಕಾರ್ಯಕರ್ತರು, ಮೆರವಣಿಗೆ ಕಾರ್ಯ ನಿರ್ವಹಿಸುವವರು, ಪ್ರಚಾರ ಕಾರ್ಯ ನಿರ್ವಹಿಸುವವರು ಮತ್ತಿತರರು ಹೊಸಕೋಟೆ ನಗರ ಸ್ಥಳೀಯ ಸಂಸ್ಥೆಗಳ 31 ವಾರ್ಡ್ಗಳ ವ್ಯಾಪ್ತಿಯಿಂದ ಹೊರಗಿರಬೇಕು. ಇಲ್ಲದಿದ್ದಲ್ಲಿ ಹೊರಗೆ ಕಳುಹಿಸುವ ಬಗ್ಗೆ ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಅನುಮಾನಾಸ್ಪದ ವಾಹನಗಳು ಹಾಗೂ ಜನರ ಸಂಚಾರದ ಮೇಲೆ ನಿಗಾವಹಿಸುವ ಮೂಲಕ ಯಾವುದೇ ರೀತಿಯಲ್ಲಿ ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆ ಆಗದಂತೆ ಕ್ರಮ ವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.