ADVERTISEMENT

ಚುನಾವಣೆಯಲ್ಲಿ ಇವಿಎಂ ಬಳಕೆ ರದ್ದು ಪಡಿಸಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2019, 15:02 IST
Last Updated 5 ನವೆಂಬರ್ 2019, 15:02 IST
ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಬಿಎಸ್ಪಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಬಿಎಸ್‌ಪಿ ಜಿಲ್ಲಾಧ್ಯಕ್ಷ ಸಿ.ಎಲ್.ಮುನಿಯಲ್ಲಪ್ಪ ಉದ್ಘಾಟಿಸಿದರು
ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಬಿಎಸ್ಪಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಬಿಎಸ್‌ಪಿ ಜಿಲ್ಲಾಧ್ಯಕ್ಷ ಸಿ.ಎಲ್.ಮುನಿಯಲ್ಲಪ್ಪ ಉದ್ಘಾಟಿಸಿದರು   

ಆನೇಕಲ್ : ಬಿಜೆಪಿ, ಇವಿಎಂ ಯಂತ್ರಗಳನ್ನು ದುರುಪಯೋಗ ಪಡಿಸಿಕೊಂಡು ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಜನರು ಬಿಜೆಪಿಯನ್ನು ಬೆಂಬಲಿಸಿಲ್ಲ. ಯಂತ್ರಗಳನ್ನು ತಂತ್ರಜ್ಞಾನದ ಮೂಲಕ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಎಲ್ಲೆಡೆ ಕೇಳಿ ಬಂದಿದೆ ಎಂದು ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಲ್‌.ಮುನಿಯಲ್ಲಪ್ಪ ಆರೋಪಿಸಿದರು.

ಅವರು ತಾಲ್ಲೂಕಿನ ಚಂದಾಪುರದಲ್ಲಿ ಬಿಎಸ್‌ಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಪ್ರಪಂಚದ ಹಲವು ದೇಶದಗಳು ಚುನಾವಣೆಯಲ್ಲಿ ಇವಿಎಂ ಯಂತ್ರಗಳ ಬಳಕೆಯನ್ನು ಕೈಬಿಟ್ಟಿವೆ. ಆದರೆ ಭಾರತದಲ್ಲಿ ಇವಿಎಂ ಬಳಕೆ ಮಾಡಲಾಗುತ್ತಿದೆ. ಕೂಡಲೇ ರದ್ದುಪಡಿಸಬೇಕು. ದೇಶದಲ್ಲಿ ಬಿಎಸ್‌ಪಿ ಸೇರಿದಂತೆ ಹಲವು ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ ಇವಿಎಂ ಬಳಕೆ ರದ್ದು ಮಾಡುವಂತೆ ಒತ್ತಾಯಿಸಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದರು.

ADVERTISEMENT

ಬಿಎಸ್‌ಪಿ ತಾಲ್ಲೂಕು ಘಟಕದ ಅಧ್ಯಕ್ಷ ಚಿನ್ನಪ್ಪ ಚಿಕ್ಕಹಾಗಡೆ ಮಾತನಾಡಿ, ಆನೇಕಲ್‌ ತಾಲ್ಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳಿವೆ. ಆದರೆ ಸ್ಥಳೀಯರಿಗೆ ಉದ್ಯೋಗವಕಾಶಗಳು ದೊರೆಯುತ್ತಿಲ್ಲ. ಸ್ಥಳೀಯರಿಗೆ ಉದ್ಯೋಗ ನೀಡಲು ಕಂಪನಿಗಳು ಮೀನಮೇಷ ಎಣಿಸುತ್ತಿವೆ. ಅನ್ಯಭಾಷಿಗರಿಗೆ ಮಣೆ ಹಾಕುತ್ತಿವೆ. ಕೂಡಲೇ ಸ್ಥಳೀಯರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಹೋರಾಟ ಮಾಡಲಾಗುವುದು ಎಂದರು.

ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಹಣವಿಲ್ಲದೇ ಯಾವುದೇ ಕೆಲಸಗಳು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಬಿಎಸ್‌ಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಲೋಕೇಶಾಚಾರಿ, ಕಾರ್ಯದರ್ಶಿ ಕೇಶವಮೂರ್ತಿ, ಮುಖಂಡರಾದ ಕೂಡ್ಲು ಶಂಭಪ್ಪ, ಮುದ್ದುಕೃಷ್ಣ, ಕುಮಾರ್, ಮುನೀರ್‌ಭಾಷಾ, ಮುನಿಯಲ್ಲಪ್ಪ, ಮುನಿಯಲ್ಲಪ್ಪ, ಲೋಕೇಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.