ದೇವನಹಳ್ಳಿ: ದೇಶದ ಅಸಂಘಟಿತರ ವಲಯದ ಆರ್ಥಿಕ ಶಕ್ತಿ ಅರಿತು ಅವರನ್ನು ಸಬಲರನ್ನಾಗಿ ಮಾಡುವ ಉದ್ದೇಶದಿಂದ ಆರ್ಥಿಕ ಗಣತಿಗೆ ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇಶದ 7ನೇ ಆರ್ಥಿಕ ಗಣತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಆರ್ಥಿಕ ಪ್ರಗತಿ ಪ್ರತಿ ಐದು ವರ್ಷಕ್ಕೆ ನಡೆಸಲಾಗುತ್ತಿದೆ. 1977ರಲ್ಲಿ ಕೇಂದ್ರ ಸರ್ಕಾರ ಆರ್ಥಿಕ ಗಣತಿಗೆ ಚಾಲನೆ ನೀಡಿದ ನಂತರ ಪ್ರಸ್ತುತ 7ನೇ ಆರ್ಥಿಕ ಗಣತಿ ಆರಂಭಿಸಲಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯಗಳಲ್ಲಿರುವ ಸಂಘಟಿತ ಮತ್ತು ಅಸಂಘಟಿತ ವರ್ಗಗಳಲ್ಲಿ ಆರ್ಥಿಕ ಚಟುವಟಿಕೆ ಹೊಂದಿರುವ ಉದ್ಯಮಗಳ ಪಟ್ಟಿ ತಯಾರಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ದೇಶದ ಆರ್ಥಿಕ ಸ್ಥಿತಿಗತಿ ವಾಸ್ತವ ಅರಿಯಲು ಮತ್ತು ಪಂಚವಾರ್ಷಿಕ ಯೋಜನೆಗಳಲ್ಲಿ ಆರ್ಥಿಕ ಸುಧಾರಣೆಗೆ ಕೈಗೊಳ್ಳಬೇಕಾದ ಯೋಜನೆಗಳಿಗೆ ಗಣತಿ ದಿಕ್ಸೂಚಿಯಾಗಲಿದೆ ಎಂದು ಹೇಳಿದರು.
ಮೊದಲ ಬಾರಿಗೆ ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿ 7ನೇ ಆರ್ಥಿಕ ಗಣತಿ ಮೊಬೈಲ್ ಆ್ಯಪ್ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಗಣತಿದಾರರು ಮನೆಯಲ್ಲಿ ನಡೆಸುತ್ತಿರುವ ಆರ್ಥಿಕ ಚಟುವಟಿಕೆಗಳ ಬಗ್ಗೆಯೂ ಮಾಹಿತಿ ಕ್ರೋಡೀಕರಿಸಲಾಗವುದು. ಹೈನುಗಾರಿಕೆ, ಟೈಲರಿಂಗ್, ಬೀಡಿಕಟ್ಟುವುದು, ಮನೆಪಾಠ, ಗಿರಣಿ ನಡೆಸುವುದು, ತಳ್ಳುಗಾಡಿಯಲ್ಲಿ ವ್ಯಾಪಾರ, ರಸ್ತೆಬದಿ ವಹಿವಾಟು, ಸೊಪ್ಪು ತರಕಾರಿ ವ್ಯಾಪಾರ, ಪ್ರತಿವಹಿವಾಟುವಿನ ಸಮಗ್ರ ವರದಿ ಗಣತಿದಾರರಿಗೆ ಸ್ಥಳೀಯರು ನೀಡಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಈ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಭಾಗಿತ್ವದಲ್ಲಿ ನಡೆಸುತ್ತಿತ್ತು. ಈ ಬಾರಿ ಸಿಎಸ್ ಸಿ ಮತ್ತು ಎನ್ಎಸ್ಎಸ್ಒ ಸಹಭಾಗಿತ್ವದಲ್ಲಿ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಸರಕುಗಳ ಉತ್ಪಾದನೆ, ವಿತರಣೆ ಮತ್ತು ಮಾರಾಟ, ರಾಷ್ಟ್ರೀಯ ಉತ್ಪನ್ನಕ್ಕೆ ಮೌಲ್ಯ ತಂದು ಕೊಡುವ ಆರ್ಥಿಕ ಚಟುವಟಿಕೆ ಎಂದು ಪರಿಗಣಿಸುವುದರಿಂದ ಆರ್ಥಿಕ ಗಣತಿ ದೇಶದ ಪ್ರಗತಿಯಲ್ಲಿ ರಾಷ್ಟ್ರೀಯ ತಲಾ ಆದಾಯ ಮತ್ತು ಜಿಡಿಪಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಜಿ.ನರಸಿಂಹಪ್ಪ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕರಿಯಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.