ADVERTISEMENT

ರಾಗಿ ಖರೀದಿ ನಿಯಮ ಬದಲಾಯಿಸಿ

ಖರೀದಿಯಲ್ಲಿನ ನ್ಯೂನ್ಯತೆ ಸರಿಪಡಿಸಲು ಮುಖ್ಯಮಂತ್ರಿ ಗಮನಕ್ಕೆ: ಶಾಸಕ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 9:00 IST
Last Updated 25 ಫೆಬ್ರುವರಿ 2020, 9:00 IST
ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿದರು
ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿದರು   

ದೊಡ್ಡಬಳ್ಳಾಪುರ: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳಲ್ಲಿ ರೈತರಿಂದ ಪ್ರಸ್ತುತ ಖರೀದಿಸಲಾಗುತ್ತಿರುವ 10ಕ್ವಿಂಟಾಲ್ ರಾಗಿ ಪ್ರಮಾಣವನ್ನು 15 ಕ್ವಿಂಟಾಲ್‍ಗೆ ಏರಿಸಬೇಕು. ರಾಗಿ ಬೆಳೆಗೆ ಸಂಬಂಧಿಸಿದಂತೆ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಸಡಿಲಗೊಳಿಸಿ ಖರೀದಿಯಲ್ಲಿನ ನ್ಯೂನ್ಯತೆ ಸರಿಪಡಿಸಬೇಕು ಎಂದು ಈಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೆ ತರಲಾಗಿದೆ. ಮಾ.2ರಂದು ಇದಕ್ಕೆ ಉತ್ತರ ಸಿಗಲಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಆರಂಭಿಸಿರುವ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಳೆದ ತಿಂಗಳು ರಾಗಿ ಖರೀದಿ ಕೇಂದ್ರಗಳಲ್ಲಿ ಪಹಣಿ ತಪ್ಪು ನಮೂದು ಮೊದಲಾದ ನ್ಯೂನ್ಯತೆ ಕುರಿತು ರೈತರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಈ ವಿಷಯ ರಾಜದಾದ್ಯಂತ ಗಮನ ಸೆಳೆದಿದೆ. ಈಗ ನ್ಯೂನ್ಯತೆ ಆದಷ್ಟು ಸರಿಪಡಿಸಲಾಗುತ್ತಿದೆ. ರೈತರು ಸಾಮಾನ್ಯವಾಗಿ ಎಕರೆಗೆ 15 ರಿಂದ 20 ಕ್ವಿಂಟಾಲ್ ರಾಗಿ ಬೆಳೆಯುತ್ತಾರೆ. ಆದರೆ, ಖರೀದಿ ಕೇಂದ್ರಗಳಲ್ಲಿ 10ಕ್ವಿಂಟಾಲ್ ರಾಗಿ ಮಾತ್ರ ಖರೀದಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗುವುದು. ತಾಲ್ಲೂಕಿನಲ್ಲಿ 4,300 ರೈತರು ಈಗಾಗಲೇ ನೋಂದಾಯಿಸಿಕೊಂಡಿದ್ದು ಫೆ.29 ಕೊನೆ ದಿನ. ರೈತರು ಗುಣಮಟ್ಟದ ರಾಗಿ ನೀಡಬೇಕು. ಅಧಿಕಾರಿಗಳು ರೈತರನ್ನು ವಿನಕಾರಣ ಅಲೆದಾಡಿಸದೆ ನಿಯಮಗಳನ್ನು ಪಾಲಿಸಬೇಕಿದೆ ಎಂದರು.

ADVERTISEMENT

ತಾಲ್ಲೂಕಿನಲ್ಲಿ ಎತ್ತಿನಹೊಳೆ ಯೋಜನೆಗಾಗಿ ದೊಡ್ಡಬಳ್ಳಾಪುರ ಭಾಗದ ಸುಮಾರು 2,500 ಎಕರೆ ಭೂಮಿಗೆ ಸಂಬಂಧಿಸಿದಂತೆ ರೈತರಿಗೆ ಕೂಡಲೇ ಪರಿಹಾರ ನೀಡಿ ಕಾಮಗಾರಿ ಪೂರ್ಣಗೊಳಿಸಲು ಸಹಕರಿಸಬೇಕು. ಬೆಂಗಳೂರಿನ ಒಳಚರಂಡಿ ನೀರು ಸಂಸ್ಕರಿಸಿ ಕೆರೆಗಳಿಗೆ ಹಾಯಿಸುವ ಯೋಜನೆ ಮೂರನೇ ಹಂತವಾಗಿ ನಾಯಂಡಹಳ್ಳಿ ಸಂಸ್ಕರಣಾ ಕೇಂದ್ರದಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಬದಲಾಯಿಸಿ ಯಶವಂತಪುರ ಹಾಗೂ ದಾಬಸ್‌ಪೇಟೆ ಭಾಗಕ್ಕೆ ಹಾಯಿಸುವ ಯೋಜನೆಗೆ ಮುಂದಾಗಿರುವ ಸರ್ಕಾರದ ಕ್ರಮ ಬದಲಾಗಬೇಕು ಎಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನ ಮತನಾಡಿ, ತಾಲ್ಲೂಕಿನಲ್ಲಿ ರಾಗಿಯಂತೆ ಜೋಳ ಕೂಡ ಹೆಚ್ಚಾಗಿ ಬೆಳೆಯಲಾಗುತ್ತಿದೆ. ಜೋಳ ಖರೀದಿ ಕೇಂದ್ರ ನಿರಂತರವಾಗಿ ತೆರೆಯಬೇಕು. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಸರ್ಕಾರ ರೈತರಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದರು.

ತಹಶೀಲ್ದಾರ್ ಟಿ.ಎಸ್.ಶಿವರಾಜ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಪಿ.ನಾರಾಯಣಸ್ವಾಮಿ, ಮುಖಂಡರಾದ ತಿ.ರಂಗರಾಜು, ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಸತೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.