ದೊಡ್ಡಬಳ್ಳಾಪುರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೊನಘಟ್ಟದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಸಮರ್ಪಕ ಅನುಷ್ಠಾನ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಡಿಯೋ ಆನ್ ವೀಲ್ಸ್ ಸಂಚಾರಿ ವಾಹನದ ಪ್ರಚಾರ ಕಾರ್ಯಕ್ರಮ ಹಾಗೂ ಬಾಲ್ಯವಿವಾಹ ನಿಷೇಧ ಅಭಿಯಾನಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಬುಧವಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮಿಪತಿ, ಸಿಡಿಪಿಒ ಅನಿತಾಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಶುಭಮಂಗಳಾ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಈ ವೇಳೆ ಬಾಲ್ಯವಿವಾಹ ನಿಷೇಧ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ವಿಡಿಯೊ ಆನ್ ವೀಲ್ಸ್ ಸಂಚಾರಿ ವಾಹನವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾರ್ಚ್ 11ರ ವರೆಗೆ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿ ಸಂಚರಿಸಲಿದೆ.
ಎಲ್ಲಾ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಜಿಲ್ಲೆಯ ಎಲ್ಲಾ ಇಲಾಖೆಯ ಹಾಸ್ಟೆಲ್ಗಳಲ್ಲಿ ಬಾಲ್ಯವಿವಾಹ ಆಗುವುದಿಲ್ಲ ಎಂಬ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಗುವುದು. ಎಲ್ಲಾ ಇಲಾಖಾ ಕಚೇರಿಗಳು, ಪ್ರೌಢಶಾಲೆ, ಕಾಲೇಜು, ಹಾಸ್ಟೆಲ್ ಹಾಗೂ ಜನಸಾಮಾನ್ಯರಿಂದ ಬಾಲ್ಯವಿವಾಹ ನಿಷೇಧ ಕುರಿತು ಸಹಿ ಸಂಗ್ರಹ ಅಭಿಯಾನ ಮಾಡಲಾಗುತ್ತದೆ.
ಬಾಲ್ಯವಿವಾಹ ನಿಷೇಧ ಕಾಯ್ದೆ ಅಭಿಯಾನದಲ್ಲಿ ಮಾನವ ಸರಪಳಿ ನಿರ್ಮಾಣ, ಅಭಿಯಾನದ ಜ್ಯೋತಿ ಸಂಚಾರ, ವಿದ್ಯಾರ್ಥಿನಿಯರಿಂದ ಕಿರುಭಾಷಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.