ADVERTISEMENT

ರಾಷ್ಟ್ರದ ಪ್ರಗತಿಗೆ ಕೈಜೋಡಿಸಿ: ಸೀತಾರಾಮರೆಡ್ಡಿ

ಮಾರ್ಗದರ್ಶನ ತೋರುವ ಪ್ರತಿ ವ್ಯಕ್ತಿಯೂ ಗುರು

​ಪ್ರಜಾವಾಣಿ ವಾರ್ತೆ
Published 4 ಜನವರಿ 2020, 13:56 IST
Last Updated 4 ಜನವರಿ 2020, 13:56 IST
ಕಾಚಹಳ್ಳಿ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕ ಸೀತಾರಾಮರೆಡ್ಡಿ ಉದ್ಘಾಟಿಸಿದರು
ಕಾಚಹಳ್ಳಿ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕ ಸೀತಾರಾಮರೆಡ್ಡಿ ಉದ್ಘಾಟಿಸಿದರು   

ವಿಜಯಪುರ: ಜೀವನಕ್ಕೆ ಉತ್ತಮ ಮಾರ್ಗದರ್ಶನ ತೋರುವ ಪ್ರತಿ ವ್ಯಕ್ತಿಯೂ ಗುರು. ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುವುದು ಸೂಕ್ತ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕ ಸೀತಾರಾಮರೆಡ್ಡಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಹೋಬಳಿ ಸಮೀಪದ ಕಾಚಹಳ್ಳಿಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ 2019-20ನೇ ಸಾಲಿನ ಶಾಲಾ ಹಾಗೂ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಜೀವನದಲ್ಲಿ ಅಂಕ ಮಾನದಂಡವಲ್ಲ. ಉತ್ತಮ ಮೌಲ್ಯ ಅಳವಡಿಸಿಕೊಳ್ಳುವುದು ಮುಖ್ಯ. ಮಕ್ಕಳು ಸಮಯಪಾಲನೆ ಮಾಡುವುದನ್ನು ಕಲಿಯಬೇಕಾಗಿದೆ. ಶಿಕ್ಷಣ ಸಂಸ್ಥೆಗಳು ಇದನ್ನು ಕಲಿಸಬೇಕು. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕೆಂದು ಹೇಳಿದರು.

ADVERTISEMENT

‌ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಮಾತನಾಡಿ, ‘ಮಾನವ ಸಂಪನ್ಮೂಲ ಅಭಿವೃದ್ಧಿಪಡಿಸುವ ಹೊಣೆಗಾರಿಕೆ ನಮ್ಮದು. ಜಾತ್ಯತೀತ ರಾಷ್ಟ್ರದಲ್ಲಿ ಬದುಕುತ್ತಿರುವ ನಾವು ಸಮಗ್ರ ರಾಷ್ಟ್ರದ ಅಭಿವೃದ್ಧಿಯಲ್ಲಿ ಭಾಗವಹಿಸಬೇಕು. ಜೀವನದಲ್ಲಿ ವಿದ್ಯೆದಾನ ಪ್ರಮುಖವಾದದು. ಮುಂದಿನ ಪೀಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಹೇಗೆ ಮುನ್ನಡೆಯಬೇಕು ಎಂಬುದು ತಿಳಿಸಿಕೊಡಬೇಕಾಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿ.ಯುನಲ್ಲಿ ಉತ್ತಮ ಸಾಧನೆ ಮಾಡಬೇಕು. ಶಿಕ್ಷಣದ ಜತೆಗೆ ಮಕ್ಕಳಲ್ಲಿ ಉತ್ತಮಮೌಲ್ಯ ರೂಪಿಸಬೇಕೆಂದು ತಿಳಿಸಿದರು.

ಶಿಕ್ಷಣ ಸಂಸ್ಥೆ ಅಧ್ಯಕ್ಷ ರಾಮಾಂಜಿನಪ್ಪ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸಿಗುವ ಸಮಯ ವ್ಯರ್ಥ ಮಾಡಿಕೊಳ್ಳದೆ ಸದುಪಯೋಗಪಡಿಸಿಕೊಳ್ಳಬೇಕು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದರು.

ಕಾರ್ಯದರ್ಶಿ ಎಂ.ಆರ್.ಶಿವಣ್ಣ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ನಗರ ಪ್ರದೇಶದ ಮಕ್ಕಳಿಗೆ ಪೈಪೋಟಿ ನೀಡಲು ಸನ್ನದ್ದುಗೊಳಿಸಬೇಕಾಗಿದೆ. ಪೋಷಕರು ಅವರ ಪ್ರಗತಿಗೆ ಹೆಚ್ಚಿನ ಸಹಕಾರ ನೀಡಬೇಕೆಂದು ಹೇಳಿದರು.

ಕಳೆದ ಸಾಲಿನಲ್ಲಿ ಹೆಚ್ಚಿನ ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಸಿ.ಎಂ.ದೇವರಾಜ್, ಎಂ.ಕೆ.ಚಂದ್ರಶೇಖರ್, ಲಕ್ಷ್ಮೀಪತಿ, ನಾರಾಯಣಸ್ವಾಮಿ, ನಾಗರಾಜ್, ಪಿ.ಯು.ಕಾಲೇಜಿನ ಪ್ರಾಂಶುಪಾಲ ಚಂದ್ರಕುಮಾರ್ಮ, ಆಂಗ್ಲಮಾಧ್ಯಮ ಶಾಲೆ ಮುಖ್ಯಶಿಕ್ಷಕ ರಾಜೇಂದ್ರಬಾಬು, ಪ್ರೌಢಶಾಲೆ ಮುಖ್ಯಶಿಕ್ಷಕ ವೀರಭದ್ರಪ್ಪ, ಮುಖ್ಯ ಶಿಕ್ಷಕಿ ರಾಧಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.