ADVERTISEMENT

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ

ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆಯಿಂದ ಆರಂಭ

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 5:10 IST
Last Updated 18 ಜೂನ್ 2021, 5:10 IST
ಹೊಸಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ದೊಡ್ಡ‌ಗಟ್ಟಿಗನಬ್ಬಿ ಗ್ರಾಮದಲ್ಲಿ ಸಚಿವ ಎಂಟಿಬಿ ನಾಗರಾಜ್ ದಿನಸಿ ಕಿಟ್ ವಿತರಿಸಿದರು
ಹೊಸಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ದೊಡ್ಡ‌ಗಟ್ಟಿಗನಬ್ಬಿ ಗ್ರಾಮದಲ್ಲಿ ಸಚಿವ ಎಂಟಿಬಿ ನಾಗರಾಜ್ ದಿನಸಿ ಕಿಟ್ ವಿತರಿಸಿದರು   

ಹೊಸಕೋಟೆ: ‘ಸರ್ಕಾರ ಕೇಳಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕೇಂದ್ರ ಸರ್ಕಾರ ಕೋವಿಡ್‌ ಲಸಿಕೆ ಮತ್ತು ಔಷಧ ನೀಡಿದ್ದು ರಾಜ್ಯದಲ್ಲಿ ಯಾವುದಕ್ಕೂ ಕೊರತೆ ಇಲ್ಲ’ ಎಂದು ಪೌರಾಡಳಿತ ಹಾಗೂ ಸಕ್ಕರೆ ಖಾತೆ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಗುರುವಾರ ತಾಲ್ಲೂಕಿನ ಕಸಬಾ ಹೋಬಳಿಯ ಎಂಟು ಹಳ್ಳಿಗಳಲ್ಲಿ ಸುಮಾರು 1,250 ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು.

ಈಗಾಗಲೇ ತಾಲ್ಲೂಕಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯ ಶೇಕಡ 80ರಷ್ಟು ಪೂರ್ಣಗೊಂಡಿದೆ. ನಾಳೆಯಿಂದ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲ್ಲೂಕಿನ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಕ್ಕೆ ರಾಜ್ಯ ಸರ್ಕಾರ ಕ್ರಮವಹಿಸಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸೂಚಿಸಿದರು.

ADVERTISEMENT

ಕೊರೊನಾ ಸೋಂಕಿನ ಹಾವಳಿ ಹಂತ ಹಂತವಾಗಿ ಕಡಿಮೆಯಾಗುತ್ತಿದ್ದರೂ ಜನತೆ ಮೈಮರೆಯಬಾರದು. ಅನಾವಶ್ಯಕವಾಗಿ ತಿರುಗಾಡುವುದನ್ನು ನಿಲ್ಲಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು.

‘ಕೇಂದ್ರದಿಂದ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿದ್ದು ಎಲ್ಲಾ ಶಾಸಕರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ನಿನ್ನೆ 36 ಸಚಿವರ ಸಭೆ ಸೇರಿಸಿ ಅವರೊಟ್ಟಿಗೆ ಮಾತನಾಡಿದ್ದರು’ ಎಂದರು.

ಸರ್ಕಾರ ಮತ್ತು ಪಕ್ಷದ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಮಾತನಾಡದೆ ಸಭೆಯಲ್ಲಿ ಮಾತ್ರ ಮಾತನಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಜನಾರ್ಧನ್, ಎಸ್‌ಟಿಬಿ ಮುನಿರಾಜು, ರಾಜೇಂದ್ರ, ಮುನಿಯಪ್ಪ, ಬಾಬು, ರಾಜಶೇಖರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.