ADVERTISEMENT

ಕೋವಿಡ್‌ ಭೀತಿ: ಮುಂಜಾಗ್ರತೆ ವಹಿಸಲು ಸೂಚನೆ

ಅಧಿಕಾರಿಗಳೊಂದಿಗೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಸಭೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2020, 13:57 IST
Last Updated 13 ಮಾರ್ಚ್ 2020, 13:57 IST
ತುರ್ತು ಸಭೆಯಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿದರು
ತುರ್ತು ಸಭೆಯಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿದರು   

ದೇವನಹಳ್ಳಿ: ಮಾರಕ ಕೋವಿಡ್-19 ಜಿಲ್ಲೆಯಲ್ಲಿ ಹರಡದಂತೆಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ವಿಶ್ವವನ್ನು ತಲ್ಲಣಗೊಳಿಸಿರುವ ಕೋವಿಡ್–19, ಇಳಿವಯಸ್ಸಿನ ವೃದ್ಧರಿಗೆ ಮತ್ತು ಎಳೆಯ ಮಕ್ಕಳಲ್ಲಿ ಹೆಚ್ಚಾಗಿ ಹರಡಲಿದೆ ಎಂಬ ಮಾಹಿತಿ ಇದೆ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸದ್ಯಕ್ಕೆ ಸಮಸ್ಯೆ ಇಲ್ಲ. ವೈದ್ಯರ ತಂಡ ನಿರಂತರವಾಗಿ ತಪಾಸಣೆಯಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದರು.

ವಿಜಯಪುರ ನಗರದಲ್ಲಿ ರೇಷ್ಮೆ ಗೂಡು ಮಾರಾಟ ಕೇಂದ್ರವಿರುವುದರಿಂದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ದೇವನಹಳ್ಳಿ ಪುರಸಭೆ ಮತ್ತು ವಿಜಯಪುರದ ಪ್ರತಿಯೊಂದು ವಾರ್ಡ್‌ಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯದ ಕಸ ವಿಲೇವಾರಿ ಮಾಡಬೇಕು. ಕುರಿ, ಕೋಳಿ ಮಾಂಸ, ಮೀನು ಮಾರಾಟಗಾರರು ಸ್ವಚ್ಛತೆ ಕಾಯ್ದುಕೊಳ್ಳಬೇಕು ಇಲ್ಲದಿದ್ದರೆ ಮಾರಾಟಕ್ಕೆ ಅವಕಾಶ ನೀಡಬೇಡಿ ಎಂದು ಹೇಳಿದರು.

ADVERTISEMENT

ಶಾಲಾ ಮಕ್ಕಳು ಮತ್ತು ಪೌರ ಕಾರ್ಮಿಕರು ತಮ್ಮ ಕೈಗಳನ್ನು ನಿತ್ಯ ಸಾಬೂನಿನಿಂದ ಸ್ವಚ್ಛಗೊಳಿಸುವಂತೆ ಸೂಚಿಸಬೇಕು. ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಕರಪತ್ರ ಮುದ್ರಿಸಿ, ಜಾಗೃತಿ ಮೂಡಿಸಬೇಕು. ಸ್ಥಳೀಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಮೂಡಿಸಬೇಕು. ಈ ಮೂಲಕ ರೋಗ ಹರಡುವ ಮೊದಲು ಮುಂಜಾಗ್ರತೆಗೆ ಜನರನ್ನು ಸಿದ್ಧಗೊಳಿಸಬೇಕು ಎಂದು ಹೇಳಿದರು.

ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್– 19ರ ಸೋಂಕು ಲಕ್ಷಣ ಇರುವವರಿಗೆ ಅಗತ್ಯ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಬೇಕು. ತಪಾಸಣಾ ಕೇಂದ್ರಗಳಲ್ಲಿ ಎಚ್ಚರಿಕೆ ವಹಿಸಬೇಕು. ಸ್ಥಳಿಯರಿಗೂ ರೋಗ ಹರಡುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಬೇಕು ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್ ಮಾತನಾಡಿ, ಕೆಮ್ಮು, ನೆಗಡಿ, ಜ್ವರ, ಶ್ವಾಸಕೋಶದ ತೊಂದರೆ ರೋಗದ ಲಕ್ಷಣವಾದರೂ, ವಿದೇಶದಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯವಾಗಿದೆ. ಅನುಮಾನಾಸ್ಪದ ರೋಗಿಗಳೆಂದು ಕಂಡು ಬಂದರೆ ಪರೀಕ್ಷೆ ನಡೆಸಿ ರೋಗದ ಖಚಿತ ಮಾಹಿತಿಯನ್ನು ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ. ಪ್ರತ್ಯೇಕ ಕೊಠಡಿಯಲ್ಲಿ ರೋಗಿಯ ಮೇಲೆ ನಿಗಾ ವಹಿಸಿ 14 ದಿನ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.

ಪ್ರಸ್ತುತ ದೇವನಹಳ್ಳಿ ನಗರದ ಆಕಾಶ್ ವೈದ್ಯಕೀಯ ಕಾಲೇಜಿನಲ್ಲಿ 20 ಹಾಸಿಗೆ, ಲೀನಾ ರಾಮಯ್ಯ ಆಸ್ಪತ್ರೆ ಮತ್ತು ಮಾನಸ ಆಸ್ಪತ್ರೆಯಲ್ಲಿ ತಲಾ ನಾಲ್ಕು ಹಾಸಿಗೆಯನ್ನು ಕಾಯ್ದಿರಿಸಲಾಗಿದೆ, ಸದ್ಯ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪ್ರಕರಣ ದಾಖಲು ಆಗಿಲ್ಲ ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಹನುಮಂತೇಗೌಡ, ವಿಜಯಪುರ ಪುರಸಭೆ ಮುಖ್ಯಾಧಿಕಾರಿ ಪ್ರದೀಪ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ.ಮುರುಡಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥನಾರಾಯಣ, ವೈದ್ಯಾಧಿಕಾರಿ ಡಾ.ಶ್ಯಾಮ್ ಸುಂದರ್ ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.