ADVERTISEMENT

ಆನೇಕಲ್‌: ಬೆಳೆ ಸಮೀಕ್ಷೆ ಶೇ.100 ಪ್ರಗತಿ ಸಾಧಿಸಿ- ತಹಶೀಲ್ದಾರ್‌ ಸಿ.ಮಹಾದೇವಯ್ಯ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2020, 5:14 IST
Last Updated 27 ಆಗಸ್ಟ್ 2020, 5:14 IST
ಆನೇಕಲ್ ತಾಲ್ಲೂಕು ಕಚೇರಿಯಲ್ಲಿ ಬೆಳೆ ಸಮೀಕ್ಷೆಯ ಪ್ರಗತಿ ಪರಿಶೀಲನೆಗಾಗಿ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ತಹಶೀಲ್ದಾರ್ ಸಿ.ಮಹಾದೇವಯ್ಯ ಮಾತನಾಡಿದರು
ಆನೇಕಲ್ ತಾಲ್ಲೂಕು ಕಚೇರಿಯಲ್ಲಿ ಬೆಳೆ ಸಮೀಕ್ಷೆಯ ಪ್ರಗತಿ ಪರಿಶೀಲನೆಗಾಗಿ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ತಹಶೀಲ್ದಾರ್ ಸಿ.ಮಹಾದೇವಯ್ಯ ಮಾತನಾಡಿದರು   

ಆನೇಕಲ್: ತಾಲ್ಲೂಕಿನಲ್ಲಿ 93 ಸಾವಿರ ಖಾತೆದಾರರಿದ್ದು ಈ ಪೈಕಿ ಶೇ 3ರಷ್ಟು ಮಂದಿ ಸಹ ಬೆಳೆ ಸಮೀಕ್ಷೆಯಲ್ಲಿ ಭಾಗಿಯಾಗಿಲ್ಲ. ಹಾಗಾಗಿ ಬೆಳೆ ಸಮೀಕ್ಷೆಯ ವೇಗವನ್ನು ಹೆಚ್ಚಿಸಲು ಮತ್ತು ಪೂರ್ಣಪ್ರಮಾಣದಲ್ಲಿ ರೈತರು ಭಾಗವಹಿಸಲು ಅನುಕೂಲವಾಗುವಂತೆ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್‌ ಸಿ.ಮಹಾದೇವಯ್ಯ ತಿಳಿಸಿದರು.

ಅವರು ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಬೆಳೆ ಸಮೀಕ್ಷೆಯ ಪ್ರಗತಿ ಪರಿಶೀಲನೆಗಾಗಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

‘ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ಮೊಬೈಲ್‌ನಲ್ಲಿ ದಾಖಲಿಸಿ ಅಪ್‌ಲೋಡ್‌ ಮಾಡುವುದರಿಂದಾಗಿ ನೈಜ ಮಾಹಿತಿ ಲಭ್ಯವಾಗುತ್ತದೆ. ಇದರಿಂದ ಬೆಳೆ ನಷ್ಟ, ಬರಗಾಲ, ಮಳೆಹಾನಿ ಸೇರಿದಂತೆ ಯಾವುದೇ ಸಂದರ್ಭಗಳಲ್ಲಿ ಪರಿಹಾರ ನೀಡಲು ಅನುಕೂಲವಾಗುತ್ತದೆ. ಸರ್ಕಾರದಿಂದ ರೈತರಿಗೆ ನೀಡಲಾಗುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಬೆಳೆ ಸಮೀಕ್ಷೆ ಅತ್ಯಂತ ವೈಜ್ಞಾನಿಕವಾಗಿ ರೂಪಿಸಿರುವ ಯೋಜನೆಯಾಗಿದೆ.

ADVERTISEMENT

‘ಇದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕು. ಗ್ರಾಮಗಳಲ್ಲಿ ರೈತರಿಗೆ ಈ ಬಗ್ಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು, ಉಪತಹಶೀಲ್ದಾರ್‌ರು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸಿಬ್ಬಂದಿಯೊಂದಿಗೆ ಮಾರ್ಗದರ್ಶನ ನೀಡಬೇಕು. ಬೆಳೆ ಸಮೀಕ್ಷೆಯ ಪ್ರಗತಿ ಅತ್ಯಂತ ಕಡಿಮೆಯಿದೆ. ಇದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ತಿಂಗಳೊಳಗಡೆ ಪೂರ್ಣಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು’ ಎಂದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ‘ಬೆಳೆ ಸಮೀಕ್ಷೆಗಾಗಿ ಪ್ರತಿ ಗ್ರಾಮಕ್ಕೂ ಇಲಾಖೆಯ ಮೂಲಕ ಖಾಸಗಿ ನಿವಾಸಿಗಳನ್ನು ಗುರುತಿಸಿ ರೈತರಿಗೆ ಮಾರ್ಗದರ್ಶನ ನೀಡಲು ನಿಯೋಜಿಸಲಾಗಿದೆ. ರೈತರು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಸಹಾಯ ಮಾಡುತ್ತಾರೆ’ ಎಂದರು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಎಸ್‌.ವಿ.ಸಿದ್ದಾರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.