ADVERTISEMENT

ಕರ್ನಾಟಕ ಬಂದ್‌ಗೆ ನಿರ್ಧಾರ: ವಾಟಾಳ್‌ ನೇತೃತ್ವದಲ್ಲಿ ಪ್ರತಿಭಟನೆ

ನದಿ ಯೋಜನೆಗೆ ವಿರೋಧ : ವಾಟಾಳ್‌ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 3:52 IST
Last Updated 24 ಫೆಬ್ರುವರಿ 2021, 3:52 IST
ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ತಮಿಳುನಾಡು ಸರ್ಕಾರ ಅಕ್ರಮವಾಗಿ ಕೈಗೊಂಡಿರುವ ನದಿ ಯೋಜನೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಹೋರಾಟಗಾರರು ಪ್ರತಿಭಟನೆ ನಡೆಸಿದರು
ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ತಮಿಳುನಾಡು ಸರ್ಕಾರ ಅಕ್ರಮವಾಗಿ ಕೈಗೊಂಡಿರುವ ನದಿ ಯೋಜನೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಹೋರಾಟಗಾರರು ಪ್ರತಿಭಟನೆ ನಡೆಸಿದರು   

ಆನೇಕಲ್: ತಮಿಳುನಾಡು ಸರ್ಕಾರ ಕೈಗೊಂಡಿರುವ ವೆಲ್ಲಾರು-ವೈಗೈ-ಗುಂಡಾರು ನದಿಗಳ ಜೋಡಣೆ ಯೋಜನೆ ಕೂಡಲೇ ಕೈಬಿಡಬೇಕು ಇಲ್ಲವಾದಲ್ಲಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ ಮಾಡಲಿವೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಎಚ್ಚರಿಸಿದರು.

ಅವರು ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ತಮಿಳುನಾಡು ಸರ್ಕಾರ ಅಕ್ರಮವಾಗಿ ಕೈಗೊಂಡಿರುವ ನದಿ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.

ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡಹೇರಿ ಯೋಜನೆ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯಕ್ಕೆ ಅನ್ಯಾಯವಾಗಲಿದೆ. ದಶಕಗಳಿಂದಲೂ ರಾಜ್ಯ ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಅನುಭವಿಸುತ್ತಲೇ ಬಂದಿದೆ. ತಮಿಳುನಾಡು ಕಾವೇರಿ ನೀರಿನ ವಿಚಾರದಲ್ಲಿ ಸದಾ ಕರ್ನಾಟಕಕ್ಕೆ ತೊಂದರೆ ಮಾಡುತ್ತಾ ಬಂದಿದೆ. ರಾಜ್ಯ ಕೈಗೊಳ್ಳುವ ಎಲ್ಲ ಯೋಜನೆ
ಗಳಿಗೂ ಅಡ್ಡಗಾಲು ಹಾಕುತ್ತದೆ. ತಮಿಳುನಾಡು ಕಾವೇರಿ ನದಿ ಯೋಜನೆ ಅಕ್ರಮವಾಗಿ ಕೈಗೊಂಡಿರುವುದನ್ನು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬಾರದು ಎಂದು ಒತ್ತಾಯಿಸಿದರು. ತಮಿಳುನಾಡು ಯೋಜನೆಗೆ ಸಂಪೂರ್ಣ ಸಿದ್ಧತೆ ನಡೆಸಿದ್ದರೂ ಸರ್ಕಾರ ಈ ಬಗ್ಗೆ ಚಕಾರವೆತ್ತದೆ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದೆ. ಕೂಡಲೇ ರಾಜ್ಯ ಸರ್ಕಾರ ದನಿ ಎತ್ತಬೇಕು ಎಂದು ಅವರು ಹೇಳಿದರು.

ADVERTISEMENT

ಡಾ.ರಾಜ್‌ ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ಮಹದಾಯಿ, ಕಾವೇರಿ, ಮೇಕೆದಾಟು ಸೇರಿದಂತೆ ಎಲ್ಲಾ ಯೋಜನೆಗಳಿಗೂ ನೆರೆ ರಾಜ್ಯಗಳು ತೊಂದರೆ ಮಾಡುತ್ತಿದೆ. ಗೋವಾ ಮತ್ತು ತಮಿಳುನಾಡು ಸರ್ಕಾರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿದೆ. ಮಹಾರಾಷ್ಟ್ರ ಗಡಿವಿವಾದ ಕೆಣಕಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಎಲ್ಲ ಸಂಘಟನೆಗಳು, ಕನ್ನಡಪರ ಹೋರಾಟಗಾರರು ನೆಲ-ಜಲದ ವಿಚಾರದಲ್ಲಿ ಯಾವುದೇ ರಾಜೀ ಮಾಡಿಕೊಳ್ಳದೆ ದನಿ ಎತ್ತಬೇಕು ಎಂದರು.

ಕನ್ನಡ ಜಾಗೃತಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥದೇವ ಮಾತನಾಡಿ, ರಾಜ್ಯದ ಯೋಜನೆಗಳಿಗೆ ಅನುಮತಿ ನೀಡಲು ಮೀನಾ ಮೇಷ ಎಣಿಸುವ ಕೇಂದ್ರ ಸರ್ಕಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ಕೈಗೊಳ್ಳುತ್ತಿರುವ ತಮಿಳುನಾಡು ರಾಜ್ಯದ ಯೋಜನೆಗೆ ಏಕಾಏಕಿ ಹಣ ಬಿಡುಗಡೆ ಮಾಡುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಈ ಯೋಜನೆ ಅನುಷ್ಠಾನಗೊಳಿಸಲು ಬಿಡಬಾರದು ಎಂದು ಹೇಳಿದರು.

ಮುಖಂಡರಾದ ಲೋಕೇಶ್‌ ಗೌಡ, ಕಿರಣ್‌ ಕುಮಾರ್, ಮಂಜೇಗೌಡ, ನಾಗರಾಜು, ಕೆ.ಆರ್‌.ಕುಮಾರ್, ಗಿರೀಶ್‌ ಗೌಡ, ಸತೀಶ್‌ ರಾಜು, ಮಧುಕುಮಾರ್, ರಾಮು ಇದ್ದರು.

ರಾಷ್ಟ್ರೀಯ ಹೆದ್ದಾರಿ 7ರ ಅತ್ತಿಬೆಲೆ ತಮಿಳುನಾಡಿನ ಗಡಿಯಲ್ಲಿ ಕನ್ನಡ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಜಮಾಯಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.