ಆನೇಕಲ್: ತಾಲ್ಲೂಕಿನ ನೀಡುವ ಲಸಿಕೆಯ ಪ್ರಮಾಣವನ್ನು ಹೆಚ್ಚಿಸಬೇಕು. ಎಲ್ಲಾ ಗ್ರಾಮಗಳಲ್ಲೂ ಲಸಿಕೆ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ.ಶಿವಣ್ಣ ಆಗ್ರಹಿಸಿದರು.
ಅವರು ತಾಲ್ಲೂಕಿನ ಚಂದಾಪುರ ಕಿತ್ತಗಾನಹಳ್ಳಿಯ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ಆನೇಕಲ್ ತಾಲ್ಲೂಕಿನಲ್ಲಿ ಸುಮಾರು 6 ಲಕ್ಷ ಜನರಿದ್ದಾರೆ. ದಿನವೊಂದಕ್ಕೆ 100 ವೈಯಲ್ಸ್ ಆನೇಕಲ್ ತಾಲ್ಲೂಕಿಗೆ ಲಸಿಕೆ ಸರಬರಾಜಾಗುತ್ತಿದೆ. ಪ್ರತಿದಿನ ಒಂದು ಸಾವಿರ ಜನರಿಗೆ ಲಸಿಕೆ ಹಾಕಬಹುದು. ಇದೇ ಪ್ರಮಾಣದಲ್ಲಿ ಲಸಿಕೆ ಹಾಕಿದರೆ ಪೂರ್ಣಗೊಳಿಸಲು ಒಂದು ವರ್ಷವಾದರೂ ಸಾಕಾಗುವುದಿಲ್ಲ. ಹಾಗಾಗಿ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ತಾಲ್ಲೂಕಿಗೆ ಲಸಿಕೆ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.
ಹಲವಾರು ಮಂದಿ ಯುವಕರು ಕೊರೊನಾ ಎರಡನೇ ಅಲೆಯಲ್ಲಿ ಮೃತಪಟ್ಟಿದ್ದಾರೆ. ಮೂರನೇ ಅಲೆ ತೀವ್ರವಾಗಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಇದರಿಂದ ರಕ್ಷಣೆ ಪಡೆಯಲು ಇರುವ ದಾರಿಯೆಂದರೆ ಲಸಿಕೆ. ಹಾಗಾಗಿ ಲಸಿಕೆ ಹಾಕಲು ಪ್ರಥಮ ಪ್ರಾಶಸ್ತ್ಯ ನೀಡಬೇಕು. ಆದರೆ ಸರ್ಕಾರ ಈ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ
ಎಂದರು.
ಲಾಕ್ಡೌನ್ ಸಂದರ್ಭದಲ್ಲಿ ಪ್ರತಿ ಕುಟುಂಬಕ್ಕೆ ₹10 ಸಾವಿರ ಘೋಷಣೆ ಮಾಡುವಂತೆ ಕಾಂಗ್ರೆಸ್ ಒತ್ತಾಯ ಮಾಡಿತ್ತು. ಆದರೆ ಸರ್ಕಾರ ಈ ಬಗ್ಗೆ ಗಮನ ಹರಿಸದೇ ಚಿಲ್ಲರೆ ಹಣ ನೀಡಿದೆ. ಬಿಜೆಪಿ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ. ಸಾರ್ವಜನಿಕರ ತೆರಿಗೆ ಹಣವನ್ನು ಸಂಕಷ್ಟದಲ್ಲಿರುವಾಗ ವೆಚ್ಚ ಮಾಡಲು ಸರ್ಕಾರಕ್ಕಿರುವ ತೊಂದರೆಯೇನು ಎಂಬುದು ಅರ್ಥವಾಗುತ್ತಿಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.