ದೇವನಹಳ್ಳಿ: ತಾಲ್ಲೂಕಿನ ಜಿಲ್ಲಾಡಳಿತ ಭವನದ ನೆಲ ಮಹಡಿಯಲ್ಲಿ ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಹಯೋಗದೊಂದಿಗೆ ಬುಧವಾರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಸ್ವ-ಸಹಾಯ ಗುಂಪುಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಿತು.
ಮಹಿಳೆಯರು ಸ್ವಾವಲಂಬಿಯಾಗಿ ದುಡಿದು ಆರ್ಥಿಕವಾಗಿ ಸಧೃಡರಾಗಬೇಕು ಎಂದು ಸ್ವ-ಸಹಾಯ ಗುಂಪುಗಳ ಮಹಿಳಾ ಉದ್ದಿಮೆದಾರರು ತಯಾರಿಸಿದ ವಸ್ತು ಮತ್ತು ತಿನಿಸುಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಉದ್ಘಾಟಿಸಿದರು.
ವಿವಿಧ ಸ್ವ-ಸಹಾಯ ಗುಂಪುಗಳು ಉತ್ಪಾದಿಸಿರುವ ತಿಂಡಿ ತಿನಿಸು, ಮಣ್ಣಿನಿಂದ ತಯಾರಿಸಿದ ವಸ್ತು, ಕರ ಕುಶಲತೆಯಿಂದ ತಯಾರಿಸಿದ ವೈರ್ಬ್ಯಾಗ್, ಜ್ಯೂಟ್ಬ್ಯಾಗ್, ಅಲಂಕಾರಿಕ ವಸ್ತುಗಳು, ಹಪ್ಪಳ, ಉಪ್ಪಿನಕಾಯಿ, ಖಾರದ ಪುಡಿ ಹಾಗೂ ದೇಶಿಯವಾಗಿ ತಯಾರಿಸಿದ ಆಹಾರ ಪದಾರ್ಥಗಳು ಸೇರಿದಂತೆ ವಿವಿಧ ಬಗೆಯ ಉತ್ಪನ್ನಗಳು ನೋಡುಗರ ಕಣ್ಮನ ಸೆಳೆದವು.
ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಕರಕುಶಲ ವಸ್ತು, ಸಿಹಿ ತಿನಿಸು ಮುಂತಾದ ಉತ್ಪನ್ನಗಳನ್ನು ಖರೀದಿಸಿದರು.
ಮೇಳದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ನಿರ್ದೇಶಕರಾದ ವಿಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಧಿಕಾರಿ ಮಂಜುನಾಥ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.