ದೇವನಹಳ್ಳಿ: ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಅಕ್ಟೋಬರ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ರೈತರು ಹತ್ತಿರದ ನೋಂದಣಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು.
ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಆಹಾರ ಇಲಾಖೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರವು ಪ್ರಸಕ್ತ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಾಲ್ ರಾಗಿಗೆ ₹ 4,886 ಬೆಲೆ ನಿಗದಿ ಪಡಿಸಿದೆ. ಅಕ್ಟೋಬರ್ 1ರಿಂದ ಡಿಸೆಂಬರ್ 15 ರವರೆಗೆ ನೋಂದಣಿ ಪ್ರಕ್ರಿಯೆ ನಡೆಯಲಿದೆ. 2026ರ ಜನವರಿ 1 ರಿಂದ ಮಾರ್ಚ್ 31ರ ವರೆಗೆ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಏಜೆನ್ಸಿ ಆಗಿ ನೇಮಿಸಲಾಗಿದೆ. ನಿಗಮದ ಉಪ ಏಜೆನ್ಸಿಗಳು ಸಹಯೋಗದಲ್ಲಿ ನೋಂದಣಿ ಪ್ರಕ್ರಿಯೆ ಬಯೋಮೆಟ್ರಿಕ್ ಆಧಾರದಲ್ಲಿ ನಡೆಯುತ್ತದೆ ಎಂದು ತಿಳಿಸಿದರು.
ಇದಕ್ಕಾಗಿ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್, ಸಿಬ್ಬಂದಿ, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ ಜೊತೆಗೆ ರೈತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಸ್ಥಳದಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ರೈತರು ಬೆಳೆದಿರುವ ಆಹಾರ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಫ್ರೂಟ್ಸ್ ದತ್ತಾಂಶದಿಂದ ಮಾಹಿತಿಯನ್ನು ಪಡೆಯಲಾಗುತ್ತದೆ. ನೋಂದಣಿಗೆ ಫ್ರೂಟ್ಸ್ ಐಡಿ ಕಡ್ಡಾಯವಾಗಿದ್ದು, ಐಡಿ ಇಲ್ಲದ ರೈತರು ಕೃಷಿ ಇಲಾಖೆಯ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪ್ರೂಟ್ಸ್ ಐಡಿ ಪಡೆದು ನೋಂದಣಿ ಮಾಡಿಕೊಳ್ಳಿ ಎಂದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುಳಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಲಾವತಿ, ಸಹಕಾರ ಸಂಘಗಳ ಉಪ ನಿಬಂಧಕ ಚಂದ್ರಶೇಖರ್, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ತನ್ವೀರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಅಬಿದಾ ಅಜುಂ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗೋಪಾಲ ಕೃಷ್ಣ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಗಿ ನೋಂದಣಿ ಕೇಂದ್ರಗಳು
ದೇವನಹಳ್ಳಿ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ ಕುರುಬರ ದೊಡ್ಡಿ ರಸ್ತೆ ಚಿಕ್ಕಬಳ್ಳಾಪುರ ರಸ್ತೆ ಹೊಸಕೋಟೆ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್ ಮಾಲೂರು ರಸ್ತೆ. ದೊಡ್ಡಬಳ್ಳಾಪುರ: ರೈತ ಭವನ ಕೇಂದ್ರ ಎಂಪಿಎಂಸಿ ಯಾರ್ಡ್ ರೈತ ಸಂಪರ್ಕ ಕೇಂದ್ರ ಸಾಸಲು ಹೋಬಳಿ ನೆಲಮಂಗಲ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ ಕೆಂಪಲಿಂಗನಹಳ್ಳಿ ಕ್ರಾಸ್ ಕುಣಿಗಲ್ ರಸ್ತೆ ನೆಲಮಂಗಲ ತಾಲ್ಲೂಕು ವ್ಯವಸಾಯ ಸೇವಾ ಸಹಕಾರ ಸಂಘ ಕಲಾಲು ಘಟ್ಟ ತ್ಯಾಮಗೊಂಡ್ಲು ಹೋಬಳಿ ವ್ಯವಸಾಯ ಸೇವಾ ಸಹಕಾರ ಸಂಘ ದಾಬಾಸ್ ಪೇಟೆ ಸೋಂಪುರ ಹೋಬಳಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.