ADVERTISEMENT

ದೇವನಹಳ್ಳಿ| ಶಾಸಕರ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ

ಜೆಜೆಎಂ ಕಾಮಗಾರಿಗೆ ಚಾಲನೆ ನೀಡಿದ ಶಾಸಕರ ವಿರುದ್ಧ ಗ್ರಾ.ಪಂ ಅಧ್ಯಕ್ಷೆ ಕಿಡಿ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2023, 5:28 IST
Last Updated 24 ಮಾರ್ಚ್ 2023, 5:28 IST
ಅರದೇಶನಹಳ್ಳಿಯಲ್ಲಿ ಜೆಜೆಎಂ ಯೋಜನೆಯಡಿ ₹1.05 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲನೆ ನೀಡಿದರು
ಅರದೇಶನಹಳ್ಳಿಯಲ್ಲಿ ಜೆಜೆಎಂ ಯೋಜನೆಯಡಿ ₹1.05 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲನೆ ನೀಡಿದರು   

ದೇವನಹಳ್ಳಿ: ತಾಲೂಕಿನ ಅರದೇಶನಹಳ್ಳಿಯಲ್ಲಿ ಜೆಜೆಎಂ ಯೋಜನೆಯಡಿ ₹1.05 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲನೆ ನೀಡಿದ್ದು, ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಜಾಲಿಗೆ ಗ್ರಾ.ಪಂ. ಅಧ್ಯಕ್ಷೆ ದೀಪ್ತಿ ವಿಜಯಕುಮಾರ್ ಆರೋಪಿಸಿದ್ದಾರೆ.

ಅರದೇಶನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿಗೆ ಶಾಸಕರು ಚಾಲನೆ ನೀಡಿದ್ದಾರೆ. ಇದರ ಬಗ್ಗೆ ಸ್ಥಳೀಯ ಗ್ರಾ.ಪಂ.ಗೆ ಮಾಹಿತಿ ನೀಡಿಲ್ಲ. ಸ್ವಗ್ರಾಮವಾಗಿದ್ದರೂ ಸಹ ನಮ್ಮ ಗಮನಕ್ಕೆ ತಂದಿಲ್ಲ. ಈ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ದೂರಿದರು.

ಶಾಸಕರು ಚುನಾವಣೆ ಹಿನ್ನಲೆಯಲ್ಲಿ ತರಾತುರಿಯಲ್ಲಿ ಸ್ಥಳೀಯರು ಜನಪ್ರತಿನಿಧಿಗಳನ್ನು ನಿರ್ಲಕ್ಷಿಸಿ ಕಾಮಗಾರಿ ನಡೆಸಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ADVERTISEMENT

ಇದು ಶಾಸಕರ ಅನುದಾನವಲ್ಲ, ಕೇಂದ್ರ ಸರ್ಕಾರ, ಜಿ.ಪಂ ನೇತೃತ್ವದಲ್ಲಿ ನಡೆಯುತ್ತಿರುವ ಕಾಮಗಾರಿ. ಇದಕ್ಕೆ ಶಾಸಕರು ಭೂಮಿ ಪೂಜೆ ನೆರವೇರಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಕಾಮಗಾರಿಗೆ ಚಾಲನೆ ನೀಡಿದ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಪ್ರತಿ ಮನೆಮನೆಗೆ ಶುದ್ಧ ಕುಡಿಯುವ ನೀರಿನ ವಿತರಣೆ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಲಜೀವನ್ ಮಿಷನ್ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ಪ್ರತಿ ಮನೆಗೂ ಕೊಳಾಯಿ ಮೂಲಕ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದರು.

ಜೆಜೆಎಂ ಯೋಜನೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ, ಸುಖಸುಮ್ಮನೆ ಅಡ್ಡಿ ಪಡಿಸುತ್ತಿದ್ದಾರೆ. ಏನೇ ಗೊಂದಲವಿದ್ದರೂ ಕುಳಿತು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಆರ್.ಮುನೇಗೌಡ, ಟಿಎಪಿಸಿಎಂಎಸ್ ನಿದೇರ್ಶಕ ರಮೇಶ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಹೋಬಳಿ ಅದ್ಯಕ್ಷ ಜಗದೀಶ್, ಜೆಡಿಎಸ್ ಎಸ್‌ಸಿ ಘಟಕದ ಮಾಜಿ ಅಧ್ಯಕ್ಷ ಹನುಮಂತಪ್ಪ, ಬಚ್ಚಣ್ಣ, ತಾ.ಪಂ. ಮಾಜಿ ಸದಸ್ಯ ಗೋಪಾಲಸ್ವಾಮಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಪಟಾಲಪ್ಪ, ಗ್ರಾಪಂ ಸದಸ್ಯ ಕೆಂಪರಾಜು, ಆನಂದ್, ನಾಗೇಶ್, ಸುಬ್ರಮಣಿ, ಗುತ್ತಿಗೆದಾರ ವಿನಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.