ADVERTISEMENT

ದೇವನಹಳ್ಳಿ| 31ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ಹೆಚ್ಚುವರಿ ಜಿಲ್ಲಾಧಿಕಾರಿ

ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಎಚ್. ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 5:49 IST
Last Updated 25 ಮಾರ್ಚ್ 2023, 5:49 IST
ಅಮರೇಶ್
ಅಮರೇಶ್   

ದೇವನಹಳ್ಳಿ: ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯವು ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ ಮತ್ತು ಕಾನೂನು ಭದ್ರತೆಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮ ಅನುಸರಿಸಿ, ಜಿಲ್ಲೆಯಲ್ಲಿ ಪರೀಕ್ಷೆ ಸುಗಮವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಎಚ್. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪ್ರತಿ ವಿಷಯಗಳ ಪರೀಕ್ಷೆಗಳಿಗೂ 2 ರಿಂದ 3 ದಿನಗಳ ಅಂತರವಿದೆ. ಪರೀಕ್ಷಾ ವೇಳಾಪಟ್ಟಿಯೂ ವಿದ್ಯಾರ್ಥಿ ಸ್ನೇಹಿಯಾಗಿದೆ. ಪ್ರತಿದಿನ ಬೆಳಿಗ್ಗೆ 10.15 ಗಂಟೆಗೆ ಮೊದಲ ಬೆಲ್ ಆಗಲಿದ್ದು, 10-30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷೆ ಪ್ರಾರಂಭವಾದ ಅರ್ಧಗಂಟೆ ಒಳಗೆ ಪರೀಕ್ಷಾ ಕೇಂದ್ರಕ್ಕೆ ಬರುವಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವಂತೆ ತಿಳಿಸಲಾಯಿತು.

ADVERTISEMENT

ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿಗಳಾಗಲೀ, ವಿದ್ಯಾರ್ಥಿಗಳಾಗಲೀ ಮೊಬೈಲ್, ಕ್ಯಾಮೆರಾ, ಡಿಜಿಟಲ್ ಗಡಿಯಾರ ತರಬಾರದು ಎಂದು ಕಟ್ಟುನಿಟ್ಟಾಗಿ ಹೇಳಿದರು.

ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಕೊಠಡಿ ನಿಗದಿಗೊಳಿಸಲು ಸೂಚಿಸಿದರು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಉತ್ತಮ ಆಸನ ವ್ಯವಸ್ಥೆ, ಶುಭ್ರ ಶೌಚಾಲಯ, ಕುಡಿಯುವ ನೀರು ಸಿಸಿ ಕ್ಯಾಮೆರಾ, ಗಾಳಿ ಬೆಳಕಿನಿಂದ ಕೂಡಿದ ಕೊಠಡಿ ಇತ್ಯಾದಿ ಮೂಲ ಸೌಲಭ್ಯಗಳು ಇರುವ ಕುರಿತು ಭೇಟಿ ನೀಡಿ, ಖಚಿತಪಡಿಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ
ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ 14,040 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಈ ಪೈಕಿ 295 ವಿದ್ಯಾರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿದ್ದಾರೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 58 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಪೈಕಿ ದೇವನಹಳ್ಳಿಯಲ್ಲಿ ಮಾತ್ರ ಒಂದು ಪರೀಕ್ಷಾ ಕೇಂದ್ರವನ್ನು ಖಾಸಗಿ ಅಭ್ಯರ್ಥಿಗಳಿಗಾಗಿ ತೆರೆಯಲಾಗಿದೆ ಎಂದರು.

ದೂರದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಹಾಲ್‌ ಟಿಕೆಟ್ ತೋರಿಸಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡುವಂತೆ ಮತ್ತು ಮಕ್ಕಳಿಗಾಗಿ ಪರೀಕ್ಷಾ ವಿಶೇಷ ಬಸ್‌ಗಳನ್ನು ಒದಗಿಸುವಂತೆ ದೊಡ್ಡಬಳ್ಳಾಪುರ ಮತ್ತು ಇತರ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌ಗೆ ಸೂಚಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯನಿರತರೆಲ್ಲರೂ ಕಡ್ಡಾಯವಾಗಿ ಮಂಡಳಿಯಿಂದ ನೀಡಿರುವ ಫೋಟೋ ಸಹಿತ ಗುರುತಿನ ಚೀಟಿಯನ್ನು ಧರಿಸಬೇಕು. ಅನಧಿಕೃತ ವ್ಯಕ್ತಿಗಳು ಒಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷೆ ಕುರಿತಂತೆ ಸುಳ್ಳು ಸುದ್ದಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಲು ತಿಳಿಸಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್. ಶ್ರೀಕಂಠ, ಜಿಲ್ಲಾ ಡಯಟ್‌ ಪ್ರಾಂಶುಪಾಲೆ ಉಷಾ ಕುಮಾರಿ, ಶಿಕ್ಷಣಾಧಿಕಾರಿ ಹನುಮಂತಪ್ಪ, ನಾಲ್ಕು ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿ, ವಿಷಯ ಪರಿವೀಕ್ಷಕರು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ತಾಲ್ಲೂಕು ಕಂದಾಯ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿ, ಖಜಾನಾಧಿಕಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.