ವಿಜಯಪುರ (ದೇವನಹಳ್ಳಿ): ಇಲ್ಲಿನ ಧರ್ಮಾಪುರ ಗ್ರಾಮದಲ್ಲಿ ಸೋಮವಾರ ಅರಣ್ಯ ಇಲಾಖೆ ಕೈಗೊಂಡ ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ರೈತರೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಸ್ವಸ್ಥರಾದ ರೈತ ಶಂಕರ್ ಅವರನ್ನು ದೇವನಹಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಂದಾಯ ಮತ್ತು ಅರಣ್ಯ ಇಲಾಖೆಗೆ ಸೇರಿದ ಜಾಗ ಒತ್ತುವರಿ ತೆರವಿಗೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಈಚೆಗೆ ಜಂಟಿ ಸರ್ವೆ ನಡೆಸಿದ್ದವು. ಸರ್ವೆ ವರದಿ ಆಧಾರದಲ್ಲಿ ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ನಡೆಸುತ್ತಿದೆ.
ಕಾರ್ಯಾಚರಣೆ ಕುರಿತು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜಮೀನಿನಲ್ಲಿ ಇದ್ದ ವಾಸದ ಮನೆ ಕೆಡವಲಾಗಿದೆ. ಫಸಲಿಗೆ ಬಂದ ಲಕ್ಷಾಂತರ ಮೌಲ್ಯದ ದ್ರಾಕ್ಷಿ ಬೆಳೆ ಹಾಳು ಮಾಡಿದ್ದಾರೆ ಎಂದು ರೈತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
‘ಇದೇ ಜಾಗಕ್ಕೆ ಕಂದಾಯ ಇಲಾಖೆ ಮಂಜೂರಾತಿ ಪತ್ರ ನೀಡಿದೆ. ಅಧಿಕಾರಿಗಳು ಮಾಹಿತಿ ನೀಡದೆ ಕಾನೂನಾತ್ಮಕ ಪರಿಹಾರಕ್ಕೆ ಅವಕಾಶ ನೀಡದೆ ಶೋಷಣೆ ಮಾಡುತ್ತಿದ್ದಾರೆ. ಇದರಿಂದಾಗಿ ನಾವು ಬೀದಿಗೆ ಬಿದ್ದಿದ್ದೇವೆ’ ಎಂದರು. ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯೆಗೆ ಸಿಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.