ADVERTISEMENT

ಕನ್ನಮಂಗಲದಿಂದ ‘ಮನೆ ಮನೆಗೆ ಸರ್ಕಾರ’ ಅಭಿಯಾನ ಆರಂಭ

ಮನೆ ಬಳಿಯೇ ಸಿಗಲಿದೆ ಎಲ್ಲ ಅಧಿಕಾರಿಗಳ ಸಂಪರ್ಕ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 3:02 IST
Last Updated 25 ಸೆಪ್ಟೆಂಬರ್ 2025, 3:02 IST
ದೇವನಹಳ್ಳಿ ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಮಾತನಾಡಿದರು
ದೇವನಹಳ್ಳಿ ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಮಾತನಾಡಿದರು   

ದೇವನಹಳ್ಳಿ:  ‘ಮನೆ ಮನೆಗೆ ಪೋಲಿಸ್’ ಅಭಿಯಾನದ ಜೊತೆಯಲ್ಲಿ ಇದೀಗ ‘ಮನೆ-ಮನೆಗೆ ಸರ್ಕಾರ’ ಎಂಬ ಅಭಿಯಾನನ್ನೂ ನಡೆಸಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ 2025ನೇ ಸಾಲಿನ ಮೂರನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ 2013 ರ ಸಮಿತಿ ಸಭೆ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಮನೆ ಮನೆಗೆ ಕಾರ್ಯಾಂಗ’ ಎಂಬ ಅಭಿಯಾನದಲ್ಲಿ ಪ್ರತಿ ಮನೆಗೆ ಒಂದು ಕ್ಯೂಆರ್ ಕೋಡ್ ಅನ್ನು ಅಂಟಿಸಲಾಗುವುದು ಅದನ್ನು ಸ್ಕ್ಯಾನ್ ಮಾಡಿದರೆ ಗ್ರಾಮ ಪಂಚಾಯತಿಯಿಂದ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಿಗುತ್ತದೆ. ಜೊತೆಗೆ ನಿಮ್ಮ ಸಮಸ್ಯೆಯನ್ನು ಅವರಿಗೆ ಕ್ಷಣಾರ್ಧದಲ್ಲಿ ತಿಳಿಸಬಹುದು. ಇದರಿಂದ ಅಧಿಕಾರಿಗಳನ್ನು ಹುಡುಕಿಕೊಂಡು ಕಚೇರಿಗಳಿಗೆ ಸುತ್ತುವುದು ತಪ್ಪುತ್ತದೆ ನಿಮ್ಮ ಸಮಸ್ಯೆಗೆ ಬೇಗನೆ ಪರಿಹಾರ ಸಿಗುತ್ತದೆ ಎಂದು ತಿಳಿಸಿದರು.

ADVERTISEMENT

ಸರ್ಕಾರದ ಕಾರ್ಯಾಂಗ ವೈಖರಿ ಸಾರ್ವಜನಿಕರಿಗೆ ಇನ್ನಷ್ಟು ಹತ್ತಿರ ವಾಗಬೇಕು ಎಂಬ ಉದ್ದೇಶದಿಂದ ಮನೆ ಮನೆಗೆ ಸರ್ಕಾರ ಅಭಿಯಾನ ನಡೆಸಲಾಗುತ್ತಿದೆ. ಆರಂಭಿಕ ಹಂತದಲ್ಲಿ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಲಾಗಿದ್ದು ಕಾರ್ಯಾರಂಭ ಮಾಡಲಾಗುತ್ತದೆ ಎಂದರು.

ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ ಮಾತಾನಾಡಿ, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಒಂದು ಕ್ಯೂಆರ್ ಕೋಡ್ ಅಂಟಿಸಲಾಗಿದೆ. ನೀವು ಅದನ್ನು ಸ್ಕ್ಯಾನ್ ಮಾಡಿ ಅದರಲ್ಲಿ ನಿಮಗೆ ಬೇಕಾದ ಮಾಹಿತಿಯನ್ನು ಪಡೆಯಬಹುದು. ಕೆಲವು ಬಾರಿ ಪೊಲೀಸ್ ಅಧಿಕಾರಿಗಳು ದೂರು ತೆಗೆದುಕೊಳ್ಳುವುದಿಲ್ಲ ಎಂಬ ಮಾತು ಕೇಳಿ ಬರುತ್ತವೆ ಅದಕ್ಕಾಗಿ ನೀವು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಅದರಲ್ಲಿ ಜಿಲ್ಲೆಯ ಎಲ್ಲಾ ಪೋಲಿಸ್ ಅಧಿಕಾರಿಗಳನ್ನು ಸಂಪರ್ಕಿಸಲು ದೂರವಾಣಿ ಸಂಖ್ಯೆ ಸಿಗುತ್ತದೆ. ಈ ಮೂಲಕ ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎನ್.ಅನುರಾಧ, ಡಿವೈಎಸ್ಪಿ ರವಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

13 ದೌರ್ಜನ್ಯ ಪ್ರಕರಣ ದಾಖಲು

ಜುಲೈ 1 ರಿಂದ ಇಲ್ಲಿಯವರೆಗೂ ಒಟ್ಟು 13 ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 13 ಪ್ರಕರಣಗಳಲ್ಲಿ ನೊಂದ 44 ಸಂತ್ರಸ್ತರಿಗೆ ಒಟ್ಟು ₹22.30 ಲಕ್ಷಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಅವಧಿಯೊಳಗೆ ವೇತನ ನೀಡದಿದ್ದರೆ ಕ್ರಮ: ಜಿಲ್ಲಾಧಿಕಾರಿ

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ ಆಗುತ್ತಿಲ್ಲ. ಕೂಡಲೇ ವೇತನ ಪಾವತಿ ಮಾಡಿ ಪಾವತಿಯಲ್ಲಿ ವಿಳಂಬವಾದರೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು. ಅವರಿಗೆ ಸಿಗಬೇಕಾದಂತಹ ನಿವೇಶನ ಮನೆ ಒದಗಿಸಬೇಕು ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ. ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ವ್ಯಾಪಾರ ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ ಮಾರ್ಗದರ್ಶನ ನೀಡಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು. ಆರೋಗ್ಯ ತಪಾಸಣೆ ನಡೆಸಿ: ಸಫಾಯಿ ಕರ್ಮಚಾರಿಗಳಿಗೆ ಕೆಲಸದ ಜೊತೆಗೆ ಆರೋಗ್ಯ ಕಾಳಜಿ ಮುಖ್ಯ ಕೆಲಸದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಕೈ-ಕಾಲಿಗೆ ಗವಸು ರಕ್ಷಣಾತ್ಮಕ ಬಟ್ಟೆ ಧರಿಸುವುದರ ಬಗ್ಗೆ ಅರಿವಿರುವುದಿಲ್ಲ. ಪ್ರತಿ ತಿಂಗಳು ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ ಹಾಗೂ ಕೆಲಸದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಗಾರ ಏರ್ಪಡಿಸಿ ಜಾಗೃತಿ ಮೂಡಿಸಿ ಎಂದು ಆರೋಗ್ಯ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.