ದೇವನಹಳ್ಳಿ: ತಾಲ್ಲೂಕಿನಾದ್ಯಂತ ಮಲೇರಿಯಾ, ಡೆಂಗಿ ಮತ್ತು ಚಿಕುನ್ ಗುನ್ಯಾ ನಿಯಂತ್ರಣಕ್ಕಾಗಿ ವಿವಿಧ ಇಲಾಖೆಗಳೂ ಸಮನ್ವಯತೆಯಿಂದ ಕೆಲಸ ಮಾಡಿ, ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ಎಂದು ತಹಶೀಲ್ದಾರ್ ಎಂ.ಅನಿಲ್ ತಿಳಿಸಿರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ವಿವಿಧ ಇಲಾಖೆಯ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಮಲೇರಿಯಾ ರೋಗ ಮುಕ್ತ ಜಿಲ್ಲಾಯಾಗಿ ರೂಪಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಸೂಚಿಸಿದರು.
ಗಣಿ ಮತ್ತು ಕಟ್ಟಡ ವಲಸಿಗ ಕಾರ್ಮಿಕರ ಮಾಹಿತಿ ಕಲೆಹಾಕಿ, ಅವರು ರಕ್ತ ಲೇಪನ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಬೇಕು. ಒಂದು ವೇಳೆ ಮಲೇರಿಯಾ ದೃಡಪಟ್ಟರೇ ತ್ವರಿತವಾಗಿ ಚಿಕಿತ್ಸೆಗೆ ವೈದ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಶಂಕಿತ ಪ್ರಕರಣಗಳಲ್ಲಿ ರಕ್ತದ ಮಾದರಿಯನ್ನು ಪ್ರಯೋಗಾಲಗಳಿಗೆ ತಲುಪಿಸಿ ತ್ವರಿತ ವೈದ್ಯಕೀಯ ಸೇವೆಗೆ ಮುಂದಾಗಿ ಎಂದು ತಿಳಿಸಿದರು.
ಸಾರ್ವಜನಿಕರಲ್ಲಿ ಈ ರೋಗಗಳ ಕುರಿತು ಜಾಗೃತ ಮೂಡಿಸಲು ಗ್ರಾ.ಪಂ ಅಧ್ಯಕ್ಷರು, ಪಿಡಿಒಗಳು, ಕಾರ್ಯದರ್ಶಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಯವರು ಮನೆ ಮನೆಗೆ ಆಶಾ ಕಾರ್ಯಕರ್ತೆಯರೊಂದಿಗೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ ನಡೆಸಬೇಕು. ತಾಲ್ಲೂಕು ಆರೋಗ್ಯಾಧಿಕಾರಿಗಳು ಈ ಸಮೀಕ್ಷೆಯ ಮೇಲ್ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.
ಪ್ರತಿ ಶಾಲೆಯಲ್ಲಿಯಲ್ಲೂ ಮುಂಜಾನೆ ಪ್ರಾರ್ಥನೆ ಸಮಯದಲ್ಲಿ ರೋಗಗಳ ಹರಡುವಿಕೆ ಹಾಗೂ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಬೇಕು. ವಸತಿ ನಿಲಯಗಳ ವಿದ್ಯಾರ್ಥಿಗಳಲ್ಲಿಯೂ ಜಾಗೃತಿ ಮೂಡಿಸಬೇಕು. ವಲಸೆ ಬರುವ ಕಾರ್ಮಿಕರ ಬಗ್ಗೆ ಜಿಲ್ಲಾ ಮಟ್ಟದ ಆರೋಗ್ಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ ಎಂದು ತಿಳಿಸಿದರು.
ಸಿಡಿಪಿಒ ಕವಿತಾ, ಬಿಇಒ ಲಲಿತಮ್ಮ, ಕಾರ್ಮಿಕ ಇಲಾಖೆ ನಿರೀಕ್ಷಣ ಅಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿ ವೆಂಕಟೇಶ್, ಕೀಟ ಶಾಸ್ತ್ರಜ್ಞೆ ಲತಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.