ADVERTISEMENT

ದೇವನಹಳ್ಳಿ: ನರೇಗಾ ದುರ್ಬಲಗೊಳಿಸಿದ ಎನ್‌ಡಿಎ

ವಿಬಿ ಜಿ ರಾಮ್‌ಜಿ ವಿರುದ್ಧ ಫೆ.23ಕ್ಕೆ ಭೃಹತ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 5:01 IST
Last Updated 20 ಫೆಬ್ರುವರಿ 2026, 5:01 IST
ವಿಭಿ ಜಿ ರಾಮ್‌ಜಿ’ ವಿರುದ್ಧ ನಡೆಯುವ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಕೆ.ಎಚ್‌. ಮುನಿಯಪ್ಪ ಮಾತನಾಡಿದರು
ವಿಭಿ ಜಿ ರಾಮ್‌ಜಿ’ ವಿರುದ್ಧ ನಡೆಯುವ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಕೆ.ಎಚ್‌. ಮುನಿಯಪ್ಪ ಮಾತನಾಡಿದರು   

ದೇವನಹಳ್ಳಿ: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯ ಸ್ವರೂಪ ಬದಲಾಯಿಸಿ ‘ಜಿ ರಾಮ್‌ಜಿ’ ಎಂದು ನಾಮಕರಣ ಮಾಡಿರುವ ಕ್ರಮವನ್ನು ಖಂಡಿಸಿ ಫೆಬ್ರುವರಿ 23ರಂದು ಚಿಕ್ಕಬಳ್ಳಾಪುರದಲ್ಲಿ ಭೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ಪಟ್ಟಣದ ಕನ್ನಮಂಗಲ ಗೇಟ್‌ ಸಮೀಪದ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ಗ್ರಾಮೀಣ ಬಡಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಗೆ ಬಂದ ಮನರೇಗಾ ಯೋಜನೆ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿತ್ತು. ಆದರೆ ಎನ್‌ಡಿಎ ಸರ್ಕಾರ ಅದರ ಮೂಲ ಉದ್ದೇಶವನ್ನೇ ದುರ್ಬಲಗೊಳಿಸುವ ರೀತಿಯಲ್ಲಿ ರೂಪುರೇಷೆ ಬದಲಾಯಿಸಿರುವುದು ಸಮಂಜಸವಲ್ಲ ಎಂದು ಹೇಳಿದರು.

ರಾಜ್ಯ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ವಿರೋಧಿಸಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ಕನಿಷ್ಠ 40 ಸಾವಿರ ಜನರನ್ನು ಪ್ರತಿಭಟನೆಗೆ ಒಗ್ಗೂಡಿಸುವ ಗುರಿ ಇಟ್ಟುಕೊಳ್ಳಲಾಗಿದೆ. ರಾಜ್ಯದಿಂದ ಭಾರೀ ಪ್ರಮಾಣದಲ್ಲಿ ಜಿಎಸ್‌ಟಿ ಸಂಗ್ರಹವಾಗುತ್ತಿದ್ದರೂ, ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಪಾಲಿಸುತ್ತಿಲ್ಲ ಎಂಬ ಆರೋಪ ಮಾಡಿದರು.

ADVERTISEMENT

ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಸಿ. ಮಂಜುನಾಥ್, ಮನರೇಗಾ ಯೋಜನೆ ಗ್ರಾಮೀಣ ಬಡಜನರಿಗೆ ಜೀವನಾಡಿಯಾಗಿತ್ತು. ಕೆರೆಗಳ ಹೂಳೆತ್ತುವುದು, ನೀರು ಸಂಗ್ರಹಣಾ ಗುಂಡಿಗಳ ನಿರ್ಮಾಣ ಸೇರಿದಂತೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಈ ಯೋಜನೆ ಸಹಕಾರಿಯಾಗಿತ್ತು. ಅದರ ರೂಪ ಬದಲಾವಣೆ ಬಡಜನರಿಗೆ ಅನ್ಯಾಯ ಎಂದು ಹೇಳಿದರು.

ಫೆ.23ರಂದು ನಡೆಯುವ ಪ್ರತಿಭಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವ ವಹಿಸಲಿದ್ದಾರೆ. ರಾಜ್ಯದ ಹಲವು ಸಚಿವರು ಹಾಗೂ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಯಿತು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರಾಜಣ್ಣ, ತಾಲೂಕು ಅಧ್ಯಕ್ಷ ಸಿ. ಜಗನ್ನಾಥ್, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಆರ್‌.ಗೌಡ, ಬಯ್ಯಪ್ಪ ಅಧ್ಯಕ್ಷ ಶಾಂತಕುಮಾರ್, ಬಮುಲ್‌ ನಿರ್ದೇಶಕ ಎಸ್‌.ಪಿ.ಮುನಿರಾಜು, ವಿಜಯಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಿನ್ನೂರು ವೆಂಕಟೇಶ್, ಸತೀಶ್‌ಕುಮಾರ್, ಬಯಪ ನಿರ್ದೇಶಕ ದ ಪ್ರಸನ್ನಕುಮಾರ್, ಮಂಜುನಾಥ್, ರಾಮಚಂದ್ರಪ್ಪ, ಅಣ್ಣೇಶ್ವರ ಚಂದ್ರಶೇಖರ್, ಬೂವನಹಳ್ಳಿ ಮುನಿರಾಜು, ಅತ್ತಿಬೆಲೆ ನರಸಪ್ಪ, ಚಿನ್ನಪ್ಪ, ನಾರಾಯಣಸ್ವಾಮಿ, ರವಿಸಿದ್ದಪ್ಪ, ಸಾಗರ್, ಅನಂತಕುಮಾರಿ, ರಾಧಮ್ಮ, ಮಾದವಿ, ಶಶಿಕಲಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.