
ದೇವನಹಳ್ಳಿ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೊ ಹನಿ ಹಾಕಿಸುವ ಮೂಲಕ ಪೋಲಿಯೊ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಪಟ್ಟಣದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯ ಇಲ್ಲದೆಯೇ ಮಕ್ಕಳಿಗೆ ಪೋಲಿಯೊ ಹನಿಯನ್ನು ತಪ್ಪದೇ ಹಾಕಿಸಿ ಮಕ್ಕಳನ್ನು ಅಂಗವೈಕಲ್ಯದಿಂದ ಪಾರುಮಾಡಬೇಕು. ಪೋಲಿಯೋ ಹನಿ ಪಡೆಯದ ಯಾವ ಮಗುವು ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು ಎಂದು ಹೇಳಿದರು.
ಡಿ.21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 1,374 ಕಠಿಣ ಪ್ರದೇಶ ಗುರುತಿಸಲಾಗಿದೆ. ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಲಸಿಕೆಯಿಂದ ವಂಚಿತ ಆಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ, ಆರ್ಸಿಎಚ್ ಅಧಿಕಾರಿ ಸೀಮಾ ರುದ್ರಪ್ಪ ಮಾಬಳೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ರಾಜಣ್ಣ, ಬಯಪ್ಪ ಅಧ್ಯಕ್ಷ ವಿ. ಶಾಂತಕುಮಾರ್, ನಿರ್ದೇಶಕ ಪ್ರಸನ್ನಕುಮಾರ್, ಪುರಸಭೆ ನಿಕಟಪೂರ್ವ ಅಧ್ಯಕ್ಷ ಡಿ.ಎಂ ಮುನಿಕೃಷ್ಣ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರ ವೆಂಕಟೇಶ್ ಉಪಸ್ಥಿತರಿದ್ದರು.
ಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 99,828 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 476 ಬೂತ್ ಸ್ಥಾಪಿಸಲಾಗಿದೆ. 85 ಟ್ರಾನ್ಸಿಟ್ ತಂಡ ರಚಿಸಲಾಗಿದೆ. 2,148 ಲಸಿಕಾದಾರರು, 106 ಮೇಲ್ವಿಚಾರಕರನ್ನು ನೇಮಿಸಿದ್ದು. 2,80,986 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.