ದೊಡ್ಡಬಳ್ಳಾಪುರ: ತಾಲ್ಲೂಕು ಪಶುಪಾಲನಾ ಮತ್ತು ಪಶುವ್ಯೆದ್ಯಾಸೇವಾ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಪಶು ಆಸ್ಪತ್ರೆ ಹಾಗೂ ತಾಲ್ಲೂಕಿನ ವಿವಿಧ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಶನಿವಾರ ಸಾಕುಪ್ರಾಣಿ ಮಾಲೀಕರಿಗೆ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ, ಶ್ವಾನ ಹಾಗೂ ಬೆಕ್ಕುಗಳಿಗೆ ಉಚಿತ ರೆಬೀಸ್ ಲಸಿಕಾ ಕಾರ್ಯಕ್ರಮ ನಡೆಯಿತು.
ರೇಬಿಸ್ ಮಸಾಚರಣೆ ಅಂಗವಾಗಿ ವಿವಿಧ ಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.
ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಡಾ.ವಿಶ್ವನಾಥ್, ರೇಬಿಸ್ಗೆ ಮೊದಲು ಲಸಿಕೆ ಕಂಡುಹಿಡಿದ ಲೂಯಿ ಪಾಶ್ಚರ್ ಮರಣ ಹೊಂದಿದ ದಿನವನ್ನು 2007 ರಿಂದ ವಿಶ್ವ ರೇಬಿಸ್ ದಿನವೆಂದು ಆಚರಿಸಲಾಗುತ್ತಿದ್ದು, ವಿಶ್ವದಾದ್ಯಂತ ರೇಬಿಸ್ ಕುರಿತು ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಮೂಲ ಆಶಯವಾಗಿದೆ ಎಂದು ತಿಳಿಸಿದರು.
ಪ್ರತಿವರ್ಷ ಸೆ.28 ರಂದು ರೇಬಿಸ್ ಸೋಂಕಿನ ಬಗ್ಗೆ ವಿಶ್ವದಾದ್ಯಂತ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವರೇಬಿಸ್ ದಿನ ಆಚರಿಸಲಾಗುತ್ತಿದೆ. ಸಾಮಾನ್ಯವಾಗಿ ಸಾಕು ಪ್ರಾಣಿಗಳ ಕಡಿತದಿಂದಾಗಿ ಅದರಲ್ಲೂ ಹುಚ್ಚುನಾಯಿ ಕಡಿತದಿಂದಾಗಿಯೇ ಬರುವಂತಹ ರೇಬಿಸ್ ಕಾಯಿಲೆಯಿಂದ ಜಗತ್ತಿನಾದ್ಯಂತ ಬಹಳಷ್ಟು ಮಂದಿ ಸಾಯುತ್ತಿದ್ದಾರೆ. ಈ ದಿಸೆಯಲ್ಲಿ ಇಂದು ರಾಜ್ಯದಾದ್ಯಂತ ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ರೇಬಿಸ್ ಲಸಿಕೆ ಹಾಕಲಾಗುತ್ತಿದೆ. ಶ್ವಾನಗಳು ಸೇರಿದಂತೆ ಸಾಕುಪ್ರಾಣಿಗಳಿಗೆ ರೇಬಿಸ್ ಲಸಿಕೆ ಹಾಕಿಸುವ ಮೂಲಕ ಮುಂಜಾಗ್ರತೆ ವಹಿಸಬೇಕಿದೆ ಎಂದರು.
ಪಶುವೈದ್ಯರಾದ ಡಾ.ವೈ.ಕುಮಾರಸ್ವಾಮಿ,ಡಾ.ದೀಪಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.