ಆನೇಕಲ್ : ಬಿಎಸ್ಪಿ ಪಕ್ಷದ ರಾಜ್ಯ ಖಜಾಂಚಿಯಾಗಿ ತಾಲ್ಲೂಕಿನ ಡಾ.ಚಿನ್ನಪ್ಪ.ವೈ.ಚಿಕ್ಕಹಾಗಡೆ ನೇಮಕಗೊಂಡಿದ್ದಾರೆ.
ಬಿಎಸ್ಪಿ ರಾಜ್ಯ ಖಜಾಂಚಿ ಡಾ.ಚಿನ್ನಪ್ಪ.ವೈ.ಚಿಕ್ಕಹಾಗಡೆ ಮಾತನಾಡಿ, ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆಗಳಲ್ಲಿ ಬಿಎಸ್ಪಿ ಪಕ್ಷವು ಹೆಚ್ಚು ಸ್ಥಾನವನ್ನು ಗಳಿಸಲು ಶ್ರಮಿಸಲಾಗುವುದು. ಪಕ್ಷವು ನೀಡಿರುವ ಜವಬ್ದಾರಿಯನ್ನು ಬದ್ಧತೆಯಿಂದ ನಿರ್ವಹಿಸಲಾಗುವುದು ಎಂದರು.
ರಾಜ್ಯದಲ್ಲಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತತ್ವ ಸಿದ್ಧಾಂತಗಳು ದೂರವಾಗಿ ಆಮಿಷಗಳಿಗೆ, ಗ್ಯಾರಂಟಿಗಳಿಗೆ ಮತದಾರರು ಬಲಿಯಾದರು. ರಾಜ್ಯದಲ್ಲಿ ದಲಿತರು ಕಾಂಗ್ರೆಸ್ ಪಕ್ಷವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲಿಸಿದರೂ ಮುಖ್ಯಮಂತ್ರಿಯಾಗಲಿ, ಉಪಮುಖ್ಯಮಂತ್ರಿ ಪದವಿಯನ್ನಾಗಲಿ ಕಾಂಗ್ರೆಸ್ ಪಕ್ಷ ನೀಡಲಿಲ್ಲ. ಸುಳ್ಳು ಭರವಸೆಗಳ ಮೂಲಕ ಕಾಂಗ್ರೆಸ್ ಜಯಗಳಿಸಿದೆ ಎಂದು ಟೀಕಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಸಮಾನತೆ ತರಲು ಸಾಧ್ಯವಾಗಲಿಲ್ಲ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಜನತೆ ಜಾಗೃತರಾಗುವ ಮೂಲಕ ಮತದಾನದ ಮಹತ್ವವನ್ನು ತಿಳಿದುಕೊಳ್ಳಬೇಕು. ಇಲ್ಲವಾದಲ್ಲಿ ಪ್ರಜಾಪ್ರಭುತ್ವ ಸಂಕಷ್ಟಕ್ಕೆ ಸಿಲುಕಲಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.