ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಡಾ.ರಾಜ್‌ಕುಮಾರ್‌ ಹೆಸರು- ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2019, 14:37 IST
Last Updated 11 ನವೆಂಬರ್ 2019, 14:37 IST
ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಸಂಜೀವ್‌ನಾಯ್ಕ್‌ ಮಾತನಾಡಿದರು
ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಸಂಜೀವ್‌ನಾಯ್ಕ್‌ ಮಾತನಾಡಿದರು   

ದೊಡ್ಡಬಳ್ಳಾಪುರ: ನಗರದಲ್ಲಿ ₹5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಡಾ.ರಾಜ್‌ಕುಮಾರ್‌ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಈ ಕುರಿತು ಡಾ.ರಾಜ್‍ಕುಮಾರ್ ಕಲಾ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ ನಾಯಕ್, 2004-05ನೇ ಸಾಲಿನಲ್ಲಿ ನಗರಸಭೆ ಅನುಮತಿ ಪಡೆದು ತಾಲ್ಲೂಕು ಶಿವರಾಜ್‍ಕುಮಾರ್ ಕನ್ನಡ ಸೇನಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡಿ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಡಾ.ರಾಜ್‍ಕುಮಾರ್ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಲಾಗಿತ್ತು. ಆದರೆ ಇದೀಗ ಅಭಿವೃದ್ದಿಯ ಹಿತದೃಷ್ಟಿಯಿಂದ ಈ ತಂಗುದಾಣಕ್ಕೆ ಹೊಂದಿಕೊಂಡಂತೆ ಕೆಎಸ್‌ಆರ್‌ಟಿಸಿಯಿಂದ ನೂತನ ಬಸ್‍ನಿಲ್ದಾಣ ನಿರ್ಮಾಣವಾಗಿದೆ. ಹಳೆಯ ತಂಗುದಾಣವನ್ನು ತೆರವು ಮಾಡಲು ನಗರಸಭೆ ಸೂಚನೆ ನೀಡಿದ್ದು, ಇದನ್ನು ತೆರವುಗೊಳಿಸುವ ಮುನ್ನ ಹೊಸ ಬಸ್‍ನಿಲ್ದಾಣಕ್ಕೆ ಕರ್ನಾಟಕ ರತ್ನ ಡಾ.ರಾಜ್‍ಕುಮಾರ್ ಬಸ್‍ನಿಲ್ದಾಣ ಎಂದು ನಾಮಕರಣ ಮಾಡಬೇಕು ಎಂದು ಆಗ್ರಹಿಸಿದರು.

ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ ಮಾತನಾಡಿ, ಈಗಾಗಲೇ ಇರುವ ನಗರಸಭೆಯ ಕೊಂಗಾಡಿಯಪ್ಪ ಬಸ್‍ನಿಲ್ದಾಣವನ್ನು ಹಾಗೇ ಉಳಿಸಿಕೊಂಡು ಅಭಿವೃದ್ಧಿಪಡಿಸಬೇಕು. ಜತೆಗೆ ಕನ್ನಡಿಗರ ಆರಾಧ್ಯ ದೈವ ಎನಿಸಿರುವ ಡಾ.ರಾಜ್ ಹೆಸರನ್ನು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಬೇಕು ಎಂದರು.

ADVERTISEMENT

ಸಭೆಯಲ್ಲಿ ಶಿವರಾಜ್‍ಕುಮಾರ್ ಕನ್ನಡ ಸೇನಾ ಸಮಿತಿ ತಾಲ್ಲೂಕು ಅಧ್ಯಕ್ಷ ಜೆ.ಆರ್.ರಮೇಶ್, ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಟಿ.ಜಿ.ಮಂಜುನಾಥ್, ಜಯಕರ್ನಾಟಕ ಅಧ್ಯಕ್ಷ ಮುನೇಗೌಡ, ಕರವೇ ಶಿವರಾಮೇಗೌಡ ಬಣದ ಅಧ್ಯಕ್ಷ ಮರುಳಾರಾಧ್ಯ, ತಾಲ್ಲೂ ಕಲಾವಿದರ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.