ವಿಜಯಪುರ(ದೇವನಹಳ್ಳಿ): ಪುರಸಭೆಯ ಎಸ್.ಜೆ.ಆರ್.ವೈ.ಕಚೇರಿಯಲ್ಲಿ ಗುರುವಾರ ಕಾರ್ಮಿಕ ಇಲಾಖೆಯಿಂದ ಪತ್ರಿಕಾ ವಿತರಕರಿಗೆ ಇ-ಶ್ರಮ್ ಕಾರ್ಡ್ ವಿತರಿಸಲಾಯಿತು.
ಕಾರ್ಮಿಕ ಇಲಾಖೆಯ ತಾಲ್ಲೂಕು ನಿರೀಕ್ಷಕಿ ಅಂಬಿಕಾ ಮಾತನಾಡಿ, ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಪತ್ರಿಕಾ ವಿತರಕರು ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಅಪಘಾತ, ಅವಘಡಗಳಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಅವರ ಜೀವನಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯ ಮೂಲಕ ಸರ್ಕಾರ, ಇ-ಶ್ರಮ್ ಕಾರ್ಡ್ ವಿತರಣೆ ಮಾಡುತ್ತಿದೆ ಎಂದು ತಿಳಿಸಿದರು.
ಇ-ಶ್ರಮ್ ಯೋಜನೆಯಡಿ ನೋಂದಣಿಗೆ ಕಟ್ಟಡ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರು, ಮೀನುಗಾರರು, ಕೃಷಿ ಸಂಗೋಪನಾಕಾರರು, ನೇಕಾರರು, ಬಡಗಿಗಳು, ಆಶಾ ಕಾರ್ಯಕರ್ತೆಯರು, ಛಾಯಾಚಿತ್ರಗ್ರಾಹಕರು, ಕ್ಷೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಮನೆಕೆಲಸದವರು, ಪತ್ರಿಕೆ ಮಾರಾಟಗಾರರು, ವಿತರಕರು, ನರೇಗಾ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ತರು, ಚರ್ಮ ಕೈಗಾರಿಕಾ ಕಾರ್ಮಿಕರು, ಟೈಲರ್, ಹೋಟೆಲ್, ಬೇಕರಿ ಕಾರ್ಮಿಕರು, ವಲಸೆ ಕಾರ್ಮಿಕರು ಸೇರಿದಂತೆ ಒಟ್ಟಾರೆ 156 ವರ್ಗಗಳ 16-59 ವರ್ಷದೊಳಗಿನವರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
ಎಸ್.ಜೆ.ಆರ್.ವೈ ಕಚೇರಿಯ ಅಧಿಕಾರಿ ಶಿವನಾಗೇಗೌಡ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.