ADVERTISEMENT

ವಿಜಯಪುರ: ಶಾಲಾ ಸಂಸತ್ ರಚನೆಗೆ ಚುನಾವಣೆ

ಉತ್ಸಾಹದಿಂದ ಪಾಲ್ಗೊಂಡ ವಿದ್ಯಾರ್ಥಿನಿಯರು

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 7:23 IST
Last Updated 26 ಜೂನ್ 2022, 7:23 IST
ವಿಜಯಪುರ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ಶಾಲಾ ಸಂಸತ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿಯರು
ವಿಜಯಪುರ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ಶಾಲಾ ಸಂಸತ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿಯರು   

ವಿಜಯಪುರ:ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಶಾಲಾ ಸಂಸತ್ ರಚನಾ ಪ್ರಕ್ರಿಯೆ ನಡೆಯಿತು.

ಶಾಲೆಯ ವಿದ್ಯಾರ್ಥಿನಿಯರು ಚುನಾವಣಾ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಮತದಾನ ಮಾಡುವ ಮೂಲಕ ತಮ್ಮ ಸ್ನೇಹಿತರು ಕೂಡ ಮತದಾನ ಮಾಡುವಂತೆ ಪ್ರೇರೇಪಿಸುತ್ತಿದ್ದರು.

ಎರಡು ದಿನಗಳಿಂದ ಶಾಲಾ ಸಂಸತ್ ರಚನೆ ಮಾಡಿಕೊಳ್ಳಲು ಚುನಾವಣಾ ಪ್ರಕ್ರಿಯೆಗೆ ಶಿಕ್ಷಕರ ಮಾರ್ಗದರ್ಶನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಶಾಲೆಯ ಅಭಿವೃದ್ಧಿ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ತಾವು ತಯಾರಿಸಿಕೊಂಡಿರುವ ಅಜೆಂಡಾವನ್ನು ಇತರೆ ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟು ಮತ ನೀಡುವಂತೆ ಮತಯಾಚಿಸಿದರು. ಶಾಲಾ ಆವರಣದಲ್ಲಿ ಸೇರಿದ್ದ ಮಕ್ಕಳು ಸಾಲುಗಟ್ಟಿ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು.

ADVERTISEMENT

10ನೇ ತರಗತಿ ವಿದ್ಯಾರ್ಥಿನಿ ಶಾಲಿನಿ ಮಾತನಾಡಿ, ‘ಚುನಾವಣೆ ಎಂಬುದು ಪ್ರಜಾಪ್ರಭುತ್ವದಲ್ಲಿ ಸರ್ಕಾರವನ್ನು ರಚನೆ ಮಾಡಿಕೊಳ್ಳಲು ನಡೆಯುವಂತಹ ಪ್ರಕ್ರಿಯೆ. ಇದರಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಪಾಲ್ಗೊಂಡು, ಪ್ರಜಾಪ್ರಭುತ್ವದ ಮೇಲೆ ವಿಶ್ವಾಸವಿಟ್ಟು, ಸಮಾಜದಲ್ಲಿನ ಎಲ್ಲಾ ಜಾತಿ ವರ್ಗದ ಜನರನ್ನು ಸಮಾನವಾಗಿ ಕಾಣುವಂತಹ ವ್ಯಕ್ತಿಗೆ ಮತ ಚಲಾಯಿಸಬೇಕು’ ಎಂದರು.

ಒಂದು ವೇಳೆ ಸ್ಪರ್ಧಿಗಳಲ್ಲಿ ಯಾರೂ ಇಷ್ಟವಿಲ್ಲದೇ ಹೋದರೆ, ನೋಟಾ ಬಟನ್ ಒತ್ತುವ ಮೂಲಕ ಮತ ಚಲಾಯಿಸುವ ಮೂಲಕ ಸಂವಿಧಾನ ದಲ್ಲಿ ಕೊಟ್ಟಿರುವ ಹಕ್ಕುಗಳನ್ನು ಚಲಾ ಯಿಸಬೇಕು. ಮತದಾನವೆಂದರೆ ಹಣ ತೆಗೆದುಕೊಂಡು ಮತದಾನ ಮಾಡು ವುದಲ್ಲ. ಅದು ನಮ್ಮ ಹಕ್ಕಾಗಿದೆ. ಭ್ರಷ್ಟಾ ಚಾರ ಮುಕ್ತವಾಗಿ ಚುನಾವಣೆಯಾಗಬೇಕು. ಈ ನಿಟ್ಟಿನಲ್ಲಿ ನಮಗೆ ಚುನಾವಣೆ ಹೇಗೆ ನಡೆಯುತ್ತದೆ, ನಾವು ಹೇಗೆ ಮತದಾನ ಮಾಡಬೇಕು, ಎಂದೆಲ್ಲಾ ಕಲಿಸಿದ್ದಾರೆ. ನಾವು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಘೋಷಿಸಿದರು.

10ನೇ ತರಗತಿ ವಿದ್ಯಾರ್ಥಿಯಾದ ಸುಮಯ್ಯ ಮಾತನಾಡಿ, ದೇಶದ ಅಭಿವೃದ್ಧಿಗಾಗಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಜನರು ಮತ ಚಲಾಯಿಸುತ್ತಾರೆ. ಅದೇ ರೀತಿ ನಮ್ಮಲ್ಲಿ ಯಾರು ಗೆಲುವು ಸಾಧಿಸುತ್ತಾರೋ ಅವರೊಂದಿಗೆ ಸೇರಿಕೊಂಡು ನಮ್ಮ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ ಎಂದು ಹೇಳಿದರು.

ಮುಖ್ಯಶಿಕ್ಷಕ ರಾಜುಹವಳೇಕರ್ ಮಾತನಾಡಿ, ಇಲಾಖೆಯ ನಿಯಮದಂತೆ ಶಾಲೆಯಲ್ಲಿ ಶಾಲಾ ಸಂಸತ್ ರಚನೆ ಮಾಡಬೇಕಾಗಿದೆ. ಚುನಾವಣೆಗಳನ್ನು ಏಕೆ ಮಾಡುತ್ತಾರೆ, ಹೇಗೆ ನಡೆಯುತ್ತವೆ, ಚುನಾವಣೆಯಲ್ಲಿ ಆಯ್ಕೆಯಾಗಿ ಬರುವವರು ಮಾಡಬೇಕಾಗಿರುವ ಕೆಲಸಗಳೇನು ಎನ್ನುವ ಕುರಿತು ಮಾಹಿತಿ ಅಗತ್ಯ ತರಬೇತಿ ಮತ್ತು ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.