ADVERTISEMENT

ಹಳ್ಳಿಗಳಿಗೆ ಮೂಲ ಸೌಕರ್ಯಕ್ಕೆ ಒತ್ತು

₹ 12 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 5:57 IST
Last Updated 29 ನವೆಂಬರ್ 2022, 5:57 IST
ಆನೇಕಲ್‌ ತಾಲ್ಲೂಕಿನ ಹೆನ್ನಾಗರ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ. ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು
ಆನೇಕಲ್‌ ತಾಲ್ಲೂಕಿನ ಹೆನ್ನಾಗರ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ. ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು   

ಆನೇಕಲ್:ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ₹ 12 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವು ಗ್ರಾಮೀಣ ಮತ್ತು ನಗರ ಪ್ರದೇಶಗಳನ್ನು ಒಳಗೊಂಡಿದೆ. ಗ್ರಾಮೀಣ ಭಾಗದಲ್ಲೂ ನಗರದ ಸೌಲಭ್ಯ ಕಲ್ಪಿಸಿ ಕೊಡುವುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಮೂಲ ಸೌಲಭ್ಯ ಅಭಿವೃದ್ಧಿಪಡಿಸಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಯಾರಂಡಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ, ಯಾಡಂಡಹಳ್ಳಿ, ಕಾಚನಾಯಕನಹಳ್ಳಿ, ಹೊಸಹಳ್ಳಿ, ಹಿನ್ನಕ್ಕಿ ಗ್ರಾಮದಲ್ಲಿ ಸಿಮೆಂಟ್‌ ರಸ್ತೆ ಕಾಮಗಾರಿ ಪ್ರಾರಂಭಿಸಲಾಗಿದೆ. ಹೆನ್ನಾಗರ ಗ್ರಾಮ ಪಂಚಾಯಿತಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಎಲ್ಲಾ ಗ್ರಾಮಗಳಲ್ಲೂ ಮೂಲ ಸೌಲಭ್ಯ ದೊರೆಯುವಂತೆ ಮಾಡಲು ಸರ್ಕಾರದಿಂದ ಹೆಚ್ಚಿನ ಅನುದಾನ ಮಂಜೂರು ಮಾಡಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದರು.

ADVERTISEMENT

ಹೆನ್ನಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿರತ್ನಮ್ಮ ಮುನಿರಾಜು ಮಾತನಾಡಿ. ಪಂಚಾಯಿತಿಯು ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿದೆ. ಹಾಗಾಗಿ, ಬಾಡಿಗೆ ಮನೆಗಳು, ಜನಸಂಖ್ಯೆ ಹೆಚ್ಚಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯ ಕಲ್ಪಿಸುವುದು ಪಂಚಾಯಿತಿಗೆ ಸವಾಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಯು ₹ 9 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಿದ್ದು ಅನುಮೋದನೆ ಪಡೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಚ್.ಜೆ. ಪ್ರಸನ್ನಕುಮಾರ್‌ ಮಾತನಾಡಿ, ಪಂಚಾಯಿತಿಗಳಿಗೆ ಆದಾಯದ ಮೂಲ ಕರ ವಸೂಲಾತಿಯಾಗಿದೆ. ಆದರೆ, ಗ್ರಾಮಗಳಲ್ಲಿ ಗ್ರಾಮ ಠಾಣಾಗಳು ಮತ್ತು ಬಿಎಂಆರ್‌ಡಿ ಬಡಾವಣೆಗಳಿಗೆ ಮಾತ್ರ ತೆರಿಗೆ ವಸೂಲು ಮಾಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಬಿಎಂಆರ್‌ಡಿ ಮಂಜೂರಾತಿ ಇಲ್ಲದ ಬಡಾವಣೆಗಳ ಮನೆಗಳಿಗೆ ಕಂದಾಯ ವಸೂಲಿ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಪಂಚಾಯಿತಿಯ ಆದಾಯ ಕುಸಿದಿದೆ. ಕರ ವಸೂಲಿಗೆ ತಂತ್ರಾಂಶದಲ್ಲಿ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಚುಂಚಘಟ್ಟ ಮಣಿ, ರಾಜಶೇಖರರೆಡ್ಡಿ, ಯಾರಂಡಹಳ್ಳಿ ಹರೀಶ್‌, ಜಿಗಣಿ ಪುನೀತ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.