ದೊಡ್ಡಬಳ್ಳಾಪುರ: ಕೈಗಾರಿಕೆ ಸ್ಥಾಪನೆಗೆ ಭೂಸ್ವಾಧೀನವಾದ ಕುಟುಂಬದವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ನೀಡುವಂತೆ ಒತ್ತಾಯಿಸಿ ಮಂಗಳವಾರದಿಂದ ಕರೆ ನೀಡಲಾಗಿದ್ದ ಓಬದೇನಹಳ್ಳಿ ಕೈಗಾರಿಕಾ ಪ್ರದೇಶದ ಬಂದ್ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಮನವಿ ಮೇರೆಗೆ ಮುಂದೂಡಲಾಗಿದೆ.
ಓಬದೇನಹಳ್ಳಿ ಕೈಗಾರಿಕಾ ಪ್ರದೇಶದ ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಮಿ ಕೊಟ್ಟ ರೈತರ ಕುಟುಂಬಕ್ಕೆ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ನೀಡಲು ಸರ್ಕಾರದ ಆದೇಶವಿದ್ದರೂ ಸಹ ಪಾಲಿಸದ ಕಾರ್ಖಾನೆಗಳ ವಿರುದ್ಧ ದೂರು ದಾಖಲಿಸಿ, ಕಾನೂನು ಕ್ರಮಕೈಗೊಳ್ಳುವಂತೆ ಬೆಳಿಗ್ಗೆ 7ರಿಂದ 48 ಗಂಟೆಗಳ ಕಾಲ ಕೈಗಾರಿಕಾ ಪ್ರದೇಶವನ್ನು ಬಂದ್ ಮಾಡಲು ಸಿದ್ಧತೆ ನಡೆಸಲಾಗಿತ್ತು. ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಒಂದು ತಿಂಗಳ ಕಾಲ ಅವಕಾಶ ಕೇಳಿರುವ ಹಿನ್ನೆಲೆಯಲ್ಲಿ ಬಂದ್ ಕೈಬಿಡಲಾಗಿದೆ ಎಂದರು.
ಕೆಐಎಡಿ ಕಾರ್ಯನಿರ್ವಹಣಾಧಿಕಾರಿ ನರಸಿಂಹಮೂರ್ತಿ ಹಾಗೂ ಡಿವೈಎಎಸ್ಪಿ ಟಿ.ರಂಗಪ್ಪ ನೇತೃತ್ವದ ತಂಡ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ, ಬಂದ್ ಕೈಬಿಡುವಂತೆ ಮನವಿ ಮಾಡಿದರು. ರೈತರಿಗೆ ಸಿಗಬೇಕಾದ ನ್ಯಾಯಸಮ್ಮತ ಉದ್ಯೋಗ ದೊರಕಿಸಲು ಕಾರ್ಖಾನೆ ಮಾಲೀಕರ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಸಭೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ಕುಮಾರ್,ಗ್ರಾಮಾಂತರ ಠಾಣೆ ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಕೆಐಎಡಿ ಸಹಾಯಕ ಅಧಿಕಾರಿ ಮೂರ್ತಿ, ಬಾಶೆಟ್ಟಿಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಆಂಜನೇಯ, ಓಬದೇನಹಳ್ಳಿ ಕೈಗಾರಿಕಾ ಪ್ರದೇಶದ ರೈತರ ಹೋರಾಟ ಸಮಿತಿ ಓಬದೇನಹಳ್ಳಿ ಮುನಿಯಪ್ಪ, ರಾಮಾಂಜಿನಪ್ಪ, ಮಂಜುನಾಥ್, ನಂದಕುಮಾರ್, ಚಂದ್ರಶೇಖರ್, ಸಂದೇಶ್, ಹನುಮಂತಗೌಡ ಮುಖಂಡರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.