ADVERTISEMENT

ಮೌಲ್ಯವೃದ್ಧಿ ಪುಸ್ತಕಗಳ ಅಧ್ಯಯನದಲ್ಲಿ ತೊಡಗಿ

ಉಚಿತ ಬೈಸಿಕಲ್, ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ತಾ.ಪಂ ಸದಸ್ಯ ಜೆ.ಎನ್.ನಾಗರಾಜು ಸಲಹೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2019, 13:29 IST
Last Updated 14 ಸೆಪ್ಟೆಂಬರ್ 2019, 13:29 IST
ವಿಜಯಪುರ ಸಮೀಪದ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಉಚಿತ ಬೈಸಿಕಲ್ ಮತ್ತು ವಿವಿಧ ಸ್ಪರ್ಧಾವಿಜೇತ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು ಉದ್ಘಾಟನೆ ಮಾಡಿದರು
ವಿಜಯಪುರ ಸಮೀಪದ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಉಚಿತ ಬೈಸಿಕಲ್ ಮತ್ತು ವಿವಿಧ ಸ್ಪರ್ಧಾವಿಜೇತ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು ಉದ್ಘಾಟನೆ ಮಾಡಿದರು   

ವಿಜಯಪುರ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು, ನಗರ ಪ್ರದೇಶದವರೊಂದಿಗೆ ಉನ್ನತ ಶಿಕ್ಷಣ, ಉದ್ಯೋಗಕ್ಕಾ‌ಗಿ ಪೈಪೋಟಿ ನಡೆಸುವುದು ಅನಿವಾರ್ಯ. ಕಲಿಕೆಯಲ್ಲಿ ಶಿಸ್ತು ಮೂಡಿಸಿಕೊಂಡು ಆತ್ಮವಿಶ್ವಾಸದಿಂದ ವ್ಯಾಸಂಗ ಮಾಡಿದರೆ ಯಾವುದೂ ಅಸಾಧ್ಯವಲ್ಲ’ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಪಿ.ಮುನಿರಾಜು ಹೇಳಿದರು.

ಸಮೀಪದ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಬೈಸಿಕಲ್ ವಿತರಣೆ, ವಿವಿಧ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಕ್ಕಳಲ್ಲಿ ಸಮಯ ಪ್ರಜ್ಞೆ ಇರಬೇಕು. ಉತ್ತಮ ಗುರಿ ಇಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಶ್ರದ್ಧೆ ಮತ್ತು ನಿಷ್ಟೆಯಿಂದ ಕಲಿಯಬೇಕು. ಆಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ’ ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಸದಸ್ಯ ಜೆ.ಎನ್.ನಾಗರಾಜು ಮಾತನಾಡಿ, ‘ಮಕ್ಕಳಲ್ಲಿ ಅಧ್ಯಯನದ ಆಸಕ್ತಿ ಕ್ಷೀಣಿಸುತ್ತಿದೆ. ಮೌಲ್ಯಗಳು ಕುಸಿಯುತ್ತಿದ್ದು, ಪಠ್ಯದ ಜೊತೆಗೆ ಉತ್ತಮ ಮೌಲ್ಯ ಬೆಳೆಸಬಲ್ಲ ಪುಸ್ತಕಗಳ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಘುನಾಥ್ ಮಾತನಾಡಿ, ‘ಮಕ್ಕಳು ಗುರು ಹಿರಿಯರಲ್ಲಿ ಗೌರವಾದರಗಳನ್ನು ತೋರುವ ಗುಣ ಬೆಳೆಸಿಕೊಳ್ಳಬೇಕು. ಪೋಷಕರೂ ಮಕ್ಕಳ ಕಲಿಕೆ ಕಡೆ ಹೆಚ್ಚು ಗಮನ ಹರಿಸಬೇಕು’ ಎಂದರು.

ಯುವ ಮುಖಂಡ ಹೊಸಪೇಟೆ ಜಿ.ಶಶಿಧರ್ ಮಾತನಾಡಿ, ‘ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆ ಗುರ್ತಿಸಿ ಅವುಗಳ ವೃದ್ಧಿಗೆ ಸೂಕ್ತ ಅವಕಾಶ ಕಲ್ಪಿಸಬೇಕು. ಮಾನವೀಯ ಸಂಬಂಧಗಳ ಅರಿವು ಮೂಡಿಸಬೇಕು. ನೈತಿಕ ಮೌಲ್ಯಗಳನ್ನು ಬೆಳೆಸುವ ಅಗತ್ಯವಿದೆ’ ಎಂದರು.

ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ‘ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ ಮಹತ್ವದ್ದಾಗಿದ್ದು, ಮಾರ್ಗದರ್ಶನದ ಅಗತ್ಯವಿದೆ. ಕಲಿಕೆಗೆ ಆಸಕ್ತಿ ಮುಖ್ಯ. ಅವರಲ್ಲಿನ ಆಸಕ್ತಿಯ ಕ್ಷೇತ್ರ ಗುರ್ತಿಸಿ, ಒತ್ತಡ ಹೇರದೆ ಕಲಿಕೆಗೆ ಪ್ರೋತ್ಸಾಹಿಸಬೇಕು’ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಶಂಕರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಎನ್.ಅಶ್ವತ್ಥಪ್ಪ, ಶಿವಶಂಕರಪ್ಪ, ಷಣ್ಮುಗಪ್ಪ, ದೇವರಾಜು, ಭಾಗ್ಯಮ್ಮ ಅರುಣ್‌ ಕುಮಾರ್, ಜಂಗಮಕೋಟೆ ರೇಷ್ಮೆ ಬೆಳೆಗಾರರ ಸಹಕಾರ ಸಂಘದ ನಿರ್ದೇಶಕ ಶ್ರೀನಿವಾಸ್, ಎಸ್‌ಡಿಎಂಸಿ ಉಪಾಧ್ಯಕ್ಷ ಜಗದೀಶ್, ಸದಸ್ಯೆ ವಿನುತಾ, ಮುನಿರತ್ನಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.