ದೇವನಹಳ್ಳಿ: ‘ಸಮಾಜದಲ್ಲಿ ಹುಟ್ಟಿದ ನಾವು ಪುನಃ ಸಮಾಜಕ್ಕೆ ಏನಾದರೂ ಕೊಡುಗೆ ನೀಡದಿದ್ದರೆ ನಮ್ಮ ಜನ್ಮ ಸಾರ್ಥಕವಾಗುವುದಿಲ್ಲ’ ಎಂದು ಜೆಡಿಎಸ್ ತಾಲ್ಲೂಕು ಘಟಕದ ಉಪಾಧ್ಯಕ್ಷ ಹನುಮಂತಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅರುಂಧತಿ ಸೇವಾ ಸಂಸ್ಥೆಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ನಾವು ಇಂತಹ ಜನಾಂಗದಲ್ಲಿಯೇ ಜನಿಸಬೇಕು ಎಂದುಕೊಂಡು ಹುಟ್ಟಿಲ್ಲ. ಹುಟ್ಟಿದ ಮೇಲೆ ಸಮಾಜದಿಂದ ಏನನ್ನು ಗಳಿಸಿದ್ದೇವೋ ಅದರಲ್ಲಿ ಸ್ವಲ್ಪ ಭಾಗವನ್ನಾದರೂ ಸಮಾಜಕ್ಕೆ ನೀಡುವಂತಹ ಕೆಲಸ ಮಾಡಬೇಕಾಗಿದೆ. ಆಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದರು.
ಸಂಘ, ಸಂಸ್ಥೆಗಳು ಕೂಡ ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ಅಭಿವೃದ್ಧಿಯತ್ತ ಕೊಂಡೊಯ್ಯುವಂತಹ ಕೆಲಸ ಮಾಡಬೇಕು. ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಮುಂದುವರಿಯಲಿಕ್ಕೆ ಇರುವಂತಹ ಎಲ್ಲಾ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಉಪಾಧ್ಯಕ್ಷ ಜಾಲಿಗೆ ಮುನಿರಾಜು ಮಾತನಾಡಿ, ಬಡವರಾಗಿ ಹುಟ್ಟುವುದು ನಮ್ಮ ತಪ್ಪಲ್ಲ. ಬಡವರಾಗಿ ಸಾಯುವುದು ನಮ್ಮ ತಪ್ಪಾಗುತ್ತದೆ. ನಮ್ಮ ಏಳಿಗೆಗಾಗಿ ಇರುವ ಎಲ್ಲಾ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಸಮುದಾಯದ ಯುವಪೀಳಿಗೆಗೆ ದಾರಿದೀಪಗಳಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.
ಅರುಂಧತಿ ಸೇವಾ ಸಂಸ್ಥೆ ಅಧ್ಯಕ್ಷ ಆನಂದ್ ಕುಮಾರ್ ಮಾತನಾಡಿದರು.ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹರ್ಷನಾಥ್, ಮುಖಂಡರಾದ ನರಸಿಂಹಮೂರ್ತಿ, ವೇಣುಗೋಪಾಲ್, ವೆಂಕಟೇಶ್, ಮಂಜುನಾಥ್, ವೆಂಕಟಪ್ಪ, ಮುನಿಕೃಷ್ಣಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.