ADVERTISEMENT

ಸೋಂಕಿನ ಆತಂಕದ ನಡುವೆ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 9:23 IST
Last Updated 30 ಜೂನ್ 2020, 9:23 IST
ಕಾರ್ಮಲ್‍ಜ್ಯೋತಿ ಪ್ರೌಢಶಾಲೆಯಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ಒಳಗೆ ಬಿಡಲಾಯಿತು
ಕಾರ್ಮಲ್‍ಜ್ಯೋತಿ ಪ್ರೌಢಶಾಲೆಯಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ಒಳಗೆ ಬಿಡಲಾಯಿತು   

ದೊಡ್ಡಬಳ್ಳಾಪುರ: ನಗರದ ಎರಡು ಪ್ರದೇಶಗಳು ಹಾಗೂ ಗ್ರಾಮಾಂತರ ಪ್ರದೇಶದ ತೂಬಗೆರೆ ಹೋಬಳಿಯ ಲಕ್ಷ್ಮೀದೇವಿಪುರ ಗ್ರಾಮದಲ್ಲಿ ಕಂಟೈನ್‌ಮೆಂಟ್‌ ಪ್ರದೇಶ ಘೋಷಣೆಯಾದ ನಂತರ ಈ ಪ್ರದೇಶದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಆತಂಕ ಎದುರಾಗಿತ್ತು.

ಸಾರ್ವಜನಿಕ ಶಿಕ್ಷಣ ಇಲಾಖೆ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಕಂಟೈನ್‍ಮೆಂಟ್ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿತ್ತು. ಭಾನುವಾರ ನಗರದ ಚಿಕ್ಕಪೇಟೆ (ಶೆಟ್ಟರಬೀದಿ)ಯಲ್ಲಿ ಉದ್ಯಮಿ ಒಬ್ಬರಿಗೆ ಸೋಂಕು ದೃಢಪಟ್ಟ ಕಾರಣ ಎಂಎಬಿಎಲ್ ಪ್ರೌಢಶಾಲೆಯಲ್ಲಿ ನಡೆಸಲಾಗುತ್ತಿದ್ದ ಪರೀಕ್ಷೆಯನ್ನು ಕಾರ್ಮಲ್ ಜ್ಯೋತಿ ಪ್ರೌಢಶಾಲೆಗೆ ವರ್ಗಾಯಿಸಲಾಗಿದೆ. ಅಲ್ಲದೆ, ಲಕ್ಷ್ಮೀ ದೇವಿಪುರ ವ್ಯಾಪ್ತಿಯಿಂದ ಬರುವ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತ್ಯೇಕವಾಗಿ ಪರೀಕ್ಷೆ ಬರೆಸಲಾಯಿತು.

ಸೋಮವಾರ ವಿಜ್ಞಾನ ಪರೀಕ್ಷೆ ನಿರಾತಂಕವಾಗಿ ನಡೆದಿದೆ. ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ 3,458 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಪೈಕಿ ಒಟ್ಟು 3,366 ವಿದ್ಯಾರ್ಥಿಗಳು ಹಾಜರಾಗಿದ್ದು, 92 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕಂಟೈನ್‍ಮೆಂಟ್ ವಲಯಗಳಿಂದ ಒಟ್ಟು 24, ಅನಾರೋಗ್ಯ ಕಾರಣದಿಂದ 5 ಮಂದಿ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಕಾರಿ ಬೈಯಪ್ಪರೆಡ್ಡಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.